ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಕ್ರಮ ವಹಿಸದ ನಿರ್ಲಕ್ಷ್ಯ ಆರೋಪದಡಿ ಜೀವನ್ಬೀಮಾನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಲಾಗಿದೆ.
ಜೀವನ್ಬೀಮಾನಗರ ಠಾಣೆ ಇನ್ಸ್ಪೆಕ್ಟರ್ ಎಂ. ಬಸವರಾಜು ಅಮಾನತುಗೊಂಡವರು. ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸರ್ಕಾರದ ಮೈದಾನದಲ್ಲಿಯೇ ಪಟಾಕಿ ಮಾರಾಟಕ್ಕೆ ಅನುಮತಿ ಕೊಡಲಾಗಿತ್ತು.
ಜೆ.ಬಿ. ನಗರ ಠಾಣಾ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿ ಅಂಗಡಿಗಳನ್ನು ಎತ್ತಂಗಡಿ ಮಾಡಿಸಿ ಪೊಲೀಸ್ ಠಾಣೆಗೆ ವರದಿ ಸಲ್ಲಿಸಿದ್ದರು. ಸಂಜೆ ವೇಳೆ ಮತ್ತೆ ವ್ಯಾಪಾರಿಗಳು ಪಾದಚಾರಿ ಮಾರ್ಗದಲ್ಲಿ ಪಟಾಕಿ ಮಾರಾಟ ಶುರು ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು, ಇನ್ಸ್ಪೆಕ್ಟರ್ ಬಸವರಾಜು ಅಕ್ರಮ ಪಟಾಕಿ ಮಾರಾಟವನ್ನು ತಡೆಗಟ್ಟುವಲ್ಲಿ ವಿಲರಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಮತ್ತು ಡಿಜಿಪಿ ಡಾ. ಅಲೋಕ್ ಮೋಹನ್ ಅವರಿಗೆ ವರದಿ ಸಲ್ಲಿಸಿದ್ದರು.
ಇದಲ್ಲದೆ, ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಸಿಸಿಬಿ ಪೊಲೀಸರು ಅಕ್ಟೋಬರ್ 26ರಂದು ನಗರದ ಎಲ್ಲೆಡೆ ಅಕ್ರಮ ಪಟಾಕಿ ಗೋದಾಮುಗಳ ಮೇಲೆ ದಾಳಿ ನಡೆಸಿದ್ದರು. ಜೆ.ಬಿ.ನಗರದಲ್ಲಿ ಅಕ್ರಮವಾಗಿ ತೆರೆದಿದ್ದ ದೊಡ್ಡ ಪಟಾಕಿ ಗೋದಾಮು ಪತ್ತೆಯಾಗಿತ್ತು. ಆದರಿಂದ ತನ್ನ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಪಟಾಕಿ ಮಾರಾಟವನ್ನು ನಿಯಂತ್ರಣ ಮಾಡುವಲ್ಲಿ ವಿಲರಾಗಿದ್ದಾರೆಂದು ಇನ್ಸ್ಪೆಕ್ಟರ್ ಬಸವರಾಜುನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.