ಹೊಳೆನರಸೀಪುರ: ಎಲ್ಲ ಸಮುದಾಯದ ಜನರಿಗೆ ಹಕ್ಕು ನೀಡಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಪಟ್ಟಣದ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ಆದರ್ಶ ಮತ್ತು ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ದೇಶದ ಆಡಳಿತದ ಕಾನೂನನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.
ಎಲ್ಲರಿಗೂ ಸಮಾನವಾಗಿ ಹಕ್ಕುಗಳನ್ನು ದೊರಕಿಸಿಕೊಟ್ಟ ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ಕಲ್ಪಿಸಿಕೊಟ್ಟವರ ಹೆಸರಿನಲ್ಲಿ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿದೆ. ಸರ್ಕಾರ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಚನ್ನರಾಯಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ರತ್ನಾಕರ್ ಅವರು ಅಂಬೇಡ್ಕರ್ ವಿಚಾರಧಾರೆ ಕುರಿತು ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು.
ತಾಲೂಕಿನ ವಿವಿಧಡೆ ಅಂಬೇಡ್ಕರ್ರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂರು ದಿನಗಳಿಂದ ಪಟ್ಟಣದ ಮುಖ್ಯ ರಸ್ತೆಗಳು ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದವು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಅಂಬೇಡ್ಕರ್ರ ಕಂಚಿನ ಪ್ರತಿಮೆಗೆ ತಾಲೂಕು ದಂಡಾಧಿಕಾರಿ ವೈ.ಎಂ.ರೇಣುಕುಮಾರ್, ಸಮಾಜ ಕಲ್ಯಾಣಾಧಿಕಾರಿ ಕೃಷ್ಣಕುಮಾರ್, ತಾಲೂಕು ಪಂಚಾಯಿತಿ ಇಒ ಮುನಿರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅನೇಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿದರು.
ಪಟ್ಟಣಕ್ಕೆ ಗ್ರಾಮೀಣ ಪ್ರದೇಶದಿಂದ ನೂರಾರು ಜನರು ಆಗಮಿಸಿ ಸಂಭ್ರಮವನ್ನು ನೋಡಿ ಕಣ್ಣು ತುಂಬಿಕೊಂಡರು. ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪುರಸಭೆ ವ್ಯಾಪ್ತಿಯಲ್ಲಿನ ವಾರ್ಡ್ಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಎಲ್ಲರ ಮನೆಯ ಮುಂಭಾಗ ರಂಗೋಲಿ ಚಿತ್ತಾರ ಕಣ್ಮನ ಸೆಳೆಯುತ್ತಿತ್ತು. ಸರ್ಕಾರಿ ಕಟ್ಟಡಗಳೂ ವಿದ್ಯುತ್ ದೀಪಾಲಂಕಾರ, ಮಾವಿನ ತೋರಣ, ಆಕರ್ಷಣೀಯ ರಂಗೋಲಿಯಿಂದ ಕಂಗೊಳಿಸುತ್ತಿತ್ತು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಸಾರ್ವಜನಿಕರು, ಅಂಬೇಡ್ಕರ್ ಅನುಯಾಯಿಗಳು, ಸರ್ಕಾರಿ ಅಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಅಂಬೇಡ್ಕರ್ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇರಿಸಿ ಮೆರವಣಿಗೆ ಮಾಡಲಾಯಿತು. ಯುವಕರು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಸುಮಾರು 20 ಕಲಾ ತಂಡಗಳು ಭಾಗಿಯಾಗಿದ್ದವು. ಅಂಬೇಡ್ಕರ್ ನಗರದಿಂದ ಹೊರಟ ಮೆರವಣಿಗೆ ಕೋಟೆ, ರಿವರ್ ಬಂಕ್ ರಸ್ತೆ, ಪೇಟೆ ಮುಖ್ಯ ರಸ್ತೆಯಲ್ಲಿ ಸಾಗಿ ಅಂಬೇಡ್ಕರ್ ವೃತ್ತದಿಂದ ಶ್ರೀಜಯ ಚಾಮರಾಜೇಂದ್ರ ವೃತ್ತದ ಮೂಲಕ ಸಾಗಿ ಸಾರ್ವಜನಿಕ ಸಮುದಾಯ ಭವನ ಮುಂಭಾಗ ಅಂತ್ಯವಾಯಿತು. ವೇದಿಕೆ ಕಾರ್ಯಕ್ರಮ ಆರಂಭಗೊಂಡಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ಡಿವೈಎಸ್ಪಿ ಶಾಲೂ, ಆರಕ್ಷಕ ವೃತ್ತ ನಿರೀಕ್ಷಕ ಬಿಆರ್ ಪ್ರದೀಪ್,ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ್, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ, ಡಾ.ರಾಜೇಶ್, ಡಿಎಸ್ಎಸ್ ರಾಜ್ಯ ಸಂಚಾಲಕ ಎಂ. ಸೋಮಶೇಖರ್, ಜಿಪಂ ಮಾಜಿ ಸದಸ್ಯ ಎಚ್.ವೈ.ಚಂದ್ರಶೇಖರ್, ಲಕ್ಕೂರು ಬಸವರಾಜ್, ವಕೀಲ ಎಚ್.ಆರ್.ಮಂಜುನಾಥ್, ಚಿನ್ನಸ್ವಾಮಿ ಮತ್ತಿತರರಿದ್ದರು.