ಬೈಂದೂರು: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಈ ದೇಶದಲ್ಲಿ ಎಲ್ಲ ಹಿಂದುಳಿದ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕೆನ್ನುವ ಉದ್ದೇಶದಿಂದ ಸಂವಿಧಾನ ರಚನೆ ಮಾಡಿದ್ದಾರೆ. ಇದರ ಫಲವಾಗಿ ಇಂದು ದೇಶದಲ್ಲಿ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯುವಂತಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಮಾಜಿ ಸಚಿವೆ ಮೋಟಮ್ಮ ಹೇಳಿದರು.

ಇಲ್ಲಿನ ಶಾರದಾ ವೇದಿಕೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿ ಹಾಗೂ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಬಲರಾಗುವ ಜತೆಗೆ ಅಂಬೇಡ್ಕರ್ ಅವರ ಆದರ್ಶ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಬೇಕು ಎಂದರು.
ಸನ್ಮಾನ
ಸಂಘದ ಅಧ್ಯಕ್ಷೆ ನಾಗರತ್ನ ಭಾಸ್ಕರ್ ಅಧ್ಯಕ್ಷತೆ ವಹಿಸಿದ್ದರು. ಸುಲೋಚನಾ(ಶಿಕ್ಷಣ ಕ್ಷೇತ್ರ) ಹಾಗೂ ಬೆಂಕಿ ಚಿರಂತ್ (ಸಾಮಾಜಿಕ ಕಲಾಕ್ಷೇತ್ರ) ಅವರನ್ನು ಸನ್ಮಾನಿಸಲಾಯಿತು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ, ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮ್ರಾಜ್, ನಿವೃತ್ತ ಬ್ಯಾಂಕ್ ಅಧಿಕಾರಿ ಗೋವಿಂದ ಎಂ., ದ.ಸಂ.ಸ ಜಿಲ್ಲಾ ಸಮಿತಿ ಸದಸ್ಯೆ ಗೀತಾ, ತಾಲೂಕು ಸಮಿತಿಯ ವಿನಯಾ, ಕೀರ್ತಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರೇಣುಕಾ ಸ್ವಾಗತಿಸಿದರು, ಚೈತ್ರಾ ಹಾಗೂ ಶಂಭು ಗುಡ್ಡಮಾಡಿ ನಿರೂಪಿಸಿದರು.