More

    ಪೊಲೀಸ್ ಕುಟುಂಬಗಳಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ

    ಚಿಕ್ಕಮಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ ಎಂದರೆ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
    ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿನ ಪೊಲೀಸ್ ಹುತಾತ್ಮರ ಸ್ಮಾರಕದ ಆವರಣದಲ್ಲಿ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
    ಅತ್ಯಂತ ಕ್ಲಿಷ್ಟಕರ ಇಲಾಖೆ ಎಂದರೆ ಅದು ಗೃಹ ಇಲಾಖೆ. ವರ್ಷದ 365 ದಿನವೂ ಇಲಾಖೆಗೆ ಒಂದೊಂದು ಸವಾಲುಗಳು ಎದುರಾಗುತ್ತಿರುತ್ತವೆ. ಕಾನೂನು ಸುವ್ಯವಸ್ಥೆ ಕಾಪಾಡುವುದರಿಂದ ಹಿಡಿದು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಇದರೊಂದಿಗೆ ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್ 19ವಿರುದ್ಧ ಹೋರಾಡುವವರೆಗೂ ಪೊಲೀಸ್ ಸಿಬ್ಬಂದಿ ಯಾವುದೇ ಹಿಂಜರಿಕೆ ಇಲ್ಲದೆ ದಿನನಿತ್ಯ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
    ಜನರ ಸೇವೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮನ್ನೇ ಸಮರ್ಪಣೆ ಮಾಡಿಕೊಂಡಿದ್ದಾರೆ. ಹಾಗಾಗಿ ನಮ್ಮ ರಾಜ್ಯ ಶಾಂತಿಯುತವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಚುನಾವಣೆ ವೇಳೆ ನಮ್ಮ ರಾಜ್ಯ ಅತ್ಯಂತ ಶಾಂತಿಯುತವಾಗಿರುತ್ತದೆ. ಹಾಗಾಗಿ ನಮ್ಮಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತದೆ. ಅದಕ್ಕೆ ಮೂಲ ಕಾರಣ ನಮ್ಮ ಪೊಲೀಸರ ಕರ್ತವ್ಯ ನಿಷ್ಠೆ . ಕಳೆದ ವರ್ಷ 189 ಹುತಾತ್ಮ ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕರ್ನಾಟಕದ 16 ಜನ ಧೀರ ಯೋಧರ ಸೇವೆ ಸದಾ ಸ್ಮರಣಿಯ ಎಂದರು.
    ಎಸ್‌ಪಿ ವಿಕ್ರಮ ಅಮಟೆ ಮಾತನಾಡಿ, 2022-23ನೇ ಸಾಲಿನಲ್ಲಿ ದೇಶಾದ್ಯಂತ ಹುತಾತ್ಮರಾದ 189 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಸಭಿಕರೆದುರು ತೆರೆದಿಟ್ಟರು. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಎಎಸ್‌ಪಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts