ಚಿಕ್ಕೋಡಿ: ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ ವಿವರಗಳನ್ನು ದಾಖಲಿಸಲು ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ಪೋನ್ ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಅವರು ಯಕ್ಸಂಬಾ ಪಟ್ಟಣದ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಿಕ್ಕೋಡಿ ಹಾಗೂ ನಿಪ್ಪಾಣಿ ವಲಯದ ಶಿಶು ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರೀಯ ಪೋಷಣ ಅಭಿಯಾನ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದರು. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಚಿವೆಯಾಗಿದ್ದೇನೆ.
ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುವುದು ನನ್ನ ಜವಾಬ್ದಾರಿಯಾಗಿದೆ. ಮಾತೃವಂದನಾ ಯೋಜನೆಯಡಿಯಲ್ಲಿ ಗರ್ಭಿಣಿಯರಿಗೆ 6000 ರೂ. ನೀಡುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದರು.
ಶಿವಮೊಗ್ಗ ಸಮನ್ವಯ ಟ್ರಸ್ಟ್ ಕಲಾ ತಂಡದಿಂದ ಪೋಷಣ ಅಭಿಯಾನ, ಬಾಲ್ಯವಿವಾಹ, ಬೇಟಿ ಬಚಾವೋ ಬೇಟಿ ಪಡಾವೋ ಹಾಗೂ ಮಾತೃವಂದನಾ ಯೋಜನೆ ಕುರಿತು ಅರಿವು ಮೂಡಿಸಲು ಬೀದಿ ನಾಟಕ ಪ್ರದರ್ಶನ ಜರುಗಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಉಪನಿರ್ದೇಶಕ ಬಸವರಾಜ ವರವಟ್ಟಿ, ಕಲ್ಲಪ್ಪ
ಜಾಧವ, ಆಶಾಜ್ಯೋತಿ ವಿಶೇಷ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಸಿಡಿಪಿಒ ಸಾವಿತ್ರಿ ಗುಗ್ಗರಿ, ಮಂಜುಶ್ರೀ ಕಟ್ಟಿಕರ, ಮಂಜುಳಾ ಹಿರೇಮಠ ಹಾಗೂ ಚಿಕ್ಕೋಡಿ, ನಿಪ್ಪಾಣಿ ವಲಯದ ಎಲ್ಲ ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.