ಹುಬ್ಬಳ್ಳಿ: ಅನ್ನಭಾಗ್ಯದ ಅಕ್ಕಿಯು ನ್ಯಾಯಬೆಲೆ ಅಂಗಡಿಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರ ಬಗ್ಗೆ ಗಮನ ಹರಿಸಬೇಕೆಂದು ನ್ಯಾಯಬೆಲೆ ಅಂಗಡಿಕಾರರು ಮನವಿ ಮಾಡಿದ್ದಾರೆ.
ನಗರದಲ್ಲಿರುವ ಶಾಸಕ ಮಹೇಶ ಟೆಂಗಿನಕಾಯಿ ಅವರ ನಿವಾಸಕ್ಕೆ ತೆರಳಿ ಅಕ್ಕಿ ವಿತರಣೆಯಲ್ಲಿನ ಸಮಸ್ಯೆಗಳ ಬಗ್ಗೆ ದೂರು ನೀಡಿದರು.
ನ್ಯಾಯಬೆಲೆ ಅಂಗಡಿಕಾರರು ಹಾಗೂ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕರು, ಧಾರವಾಡ ಹಾಗೂ ಸ್ಥಳಿಯ ಆಹಾರ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮುಖಾಂತರ ಮಾತನಾಡಿದರು.
ಎಫ್ ಸಿಐ ಗುತ್ತಿಗೆದಾರರಿಂದ ಅಕ್ಕಿ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.
ಏನೇ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸಿ ಸಮರ್ಪಕ ಅಕ್ಕಿ ಪೂರೈಸುವಂತೆ ಶಾಸಕರು ಸೂಚಿಸಿದರು.
ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಬಾರದು. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೂ ವ್ಯವಸ್ಥೆ ಸರಿಪಡಿಸಲು ಸೂಚಿಸಲಾಗಿದೆ ಎಂದು ಅಂಗಡಿಕಾರಾರಿಗೆ ತಿಳಿಸಿದರು.