ನಂಜನಗೂಡು: ನಿಯಮಿತವಾಗಿ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ಮಿದುಳನ್ನು ಸುಸ್ಥಿತಿಯಲ್ಲಿಡುವುದರ ಜತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಂಡು ಸಕಾರಾತ್ಮಕ ಚಿಂತನೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ವಿಸ್ಡಂ ಶಾಲೆಯ ಸ್ಥಾಪಕ ಮಂಜುನಾಥ್ ಸೋಮಶೇಖರ್ ಹೇಳಿದರು.
ನಗರದ ಹೌಸಿಂಗ್ಬೋರ್ಡ್ ಕಾಲನಿಯಲ್ಲಿರುವ ಯೋಗ ಮಹಾಮನೆಯಲ್ಲಿ ಭಾನುವಾರ ನಡೆದ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಇಡೀ ಜೀವನವನ್ನು ಸನ್ಮಾರ್ಗದತ್ತ ತೆಗೆದುಕೊಂಡು ಹೋಗುವ ಶಕ್ತಿ ನಮ್ಮ ಮಿದುಳಿಗಿದೆ. ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜು ಎಚ್. ಕೆಬ್ಬೇಪುರ ಮಾತನಾಡಿ, ನೈತಿಕ ಸ್ಥೈರ್ಯ ಹಾಗೂ ಬದ್ಧತೆ ಉಳಿಸಿಕೊಳ್ಳಲು ಯೋಗ ಸಹಕಾರಿ ಎಂದರು.
ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಕಾರ್ಯದರ್ಶಿ ಎನ್.ಆರ್.ಗಣೇಶ್ಮೂರ್ತಿ ಮಾತನಾಡಿ, ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಬೇಕು. ಪಾಲಕರಿಗೂ ಇದರ ಅರಿವಿರಬೇಕು ಈ ನಿಟ್ಟಿನಲ್ಲಿ ಸಂಸ್ಥೆ ಹಲವು ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡು ಬಂದಿದೆ ಎಂದರು. ಕಾರ್ಯಕ್ರಮದಲ್ಲಿ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಗಾಯಕ ಸ್ವರೂಪ್ ರಮೇಶ್ ದೇವರ ನಾಮ ಗೀತೆಗಳನ್ನು ಪ್ರಸ್ತುತ ಪಡಿಸಿದರು.
ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಆರ್.ವಿ.ರೇವಣ್ಣ, ಕಾರ್ಯದರ್ಶಿ ಎನ್.ಆರ್.ಗಣೇಶ್ಮೂರ್ತಿ, ಪ್ರಧಾನ ಯೋಗ ಶಿಕ್ಷಕ ಪ್ರಕಾಶ್ ಜಿ.ಉಡಿಗಾಲ, ನಂಜನಗೂಡು ಯೋಗ ಫೌಂಡೇಶನ್ ಅಧ್ಯಕ್ಷ ಡಿಗ್ಗೇನಹಳ್ಳಿ ಪ್ರಕಾಶ್ ಇದ್ದರು.