More

    ಅಪಘಾತ ತಪ್ಪಿಸಲು ಬ್ಲ್ಯಾಕ್‌ಸ್ಪಾಟ್ ಗುರುತಿಸಿ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಸೂಚನೆ

    ರಾಮನಗರ: ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿ ಮತ್ತು ಜಿಲ್ಲೆಯ ಒಳಗಿರುವ ರಸ್ತೆಗಳಲ್ಲಿ ಅಪಘಾತಗಳು ಸಂಭವಿಸುವ ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷೆ ಎಂ.ಎಸ್ ಅರ್ಚನಾ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ, ಅಧಿಕವಾಗಿ ಅಪಘಾತ ಸಂಭವಿಸುವಂಥ ಕಪ್ಪು ವಲಯಗಳನ್ನು ಗುರುತಿಸಿ, ಅಂತಹ ಕಡೆ ವಾಹನ ಚಾಲಕರು, ಸವಾರರು ಮತ್ತು ಪಾದಚಾರಿಗಳಿಗೆ ಎಚ್ಚರಿಕೆ ನೀಡುವಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ತಿಳಿಸಿದರು.

    ಹೆದ್ದಾರಿಯಲ್ಲಿ ಬರುವ ಜನಸಂದಣಿ ಪ್ರದೇಶಗಳ ಬಳಿ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಒತ್ತು ನೀಡಬೇಕು ಹಾಗೂ ದ್ವಿಚಕ್ರ ವಾಹನ, ಸೈಕಲ್‌ಗಳಿಗೆ ಪ್ರತ್ಯೇಕ ಟ್ರ್ಯಾಕ್ ನಿರ್ಮಿಸುವಂತೆ ಅರ್ಚನಾ ಸಲಹೆ ನೀಡಿದರು.

    ಅಪಘಾತ ಕಡಿಮೆ: ಜಿಲ್ಲೆಯಲ್ಲಿ ಆರು ತಿಂಗಳಲ್ಲಿ ಅಪಘಾತದ ಪ್ರಮಾಣದಲ್ಲಿ ಶೇ.10 ಕಡಿಮೆ ಆಗಿವೆ. ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದುದರಿಂದ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆಯೇ ಅಥವಾ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದರಿಂದ ತಗ್ಗಿದೆಯೇ ಎಂಬ ಬಗ್ಗೆ ವರದಿ ನೀಡುವಂತೆ ಅರ್ಚನಾ ತಿಳಿಸಿದರು. ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಾಲಕರು, ಸವಾರರಿಗೆ ಮತ್ತು ಪಾದಚಾರಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

    ಅನಧಿಕೃತ ಅಂಗಡಿ ತೆರವು: ಜಿಲ್ಲೆಯಲ್ಲಿ ಹೆದ್ದಾರಿ ಬದಿಯಲ್ಲಿರುವ ಅನಧಿಕೃತ ಅಂಗಡಿಗಳು ಮತ್ತು ಕಾಫಿ-ಟೀ ಮಾರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಗ್ರಾಪಂಗಳಿಗೆ ತಿಳಿಸಿ ಎಂದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತ, ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಲೋಕೋಪಯೋಗಿ ಇಲಾಖೆ ಅಭಿಯಂತ, ಭೂ ವಿಜ್ಞಾನ ಮತ್ತು ಗಣಿ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

    ಕಾಣದ ಯೂ-ಟರ್ನ್: ರಾಷ್ಟ್ರೀಯ ಹೆದ್ದಾರಿ ನಡುವೆ ಬರುವಂತಹ ರಸ್ತೆ ವಿಭಜಕಗಳಿರುವ ಕಡೆಗಳಲ್ಲಿ ಗಿಡ-ಗಂಟಿ ಹಾಗೂ ಮರಗಳು ಬೆಳೆದಿವೆ. ಇದರಿಂದ ಚಾಲಕರಿಗೆ ರಸ್ತೆ ನಡುವಿನ ಯು-ಟರ್ನ್‌ಗಳು ಕಾಣಿಸದೆ ಅಪಘಾತಕ್ಕೆ ಕಾರಣವಾಗುತ್ತಿವೆ. ಇದನ್ನು ತಪ್ಪಿಸಲು ಅಡ್ಡಲಾಗಿರುವ ಮರ ಗಿಡಗಳನ್ನು ತೆರವುಗೊಳಿಸುವಂತೆ ಸೂಚಿಸಿದರು. ಜಾನಪದ ಲೋಕದ ಬಳಿಯ ಯೂ-ಟರ್ನ್ ಚಿಕ್ಕದಾಗಿದ್ದು, ವಾಹನ ಚಾಲಕರಿಗೆ ತಿರುವು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ರಸ್ತೆ ಸಹ ಸರಿಯಾಗಿ ಕಾಣಿಸುವುದಿಲ್ಲ. ವೈಜ್ಞಾನಿಕವಾಗಿ ಸರಿಪಡಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಅರ್ಚನಾ ತಿಳಿಸಿದರು.

    ಟ್ರಾಮಾ ಸೆಂಟರ್: ಹೆದ್ದಾರಿ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲು ನೆರವಾಗುವಂತೆ ಹೆದ್ದಾರಿ ಪಕ್ಕದಲ್ಲಿ ಟ್ರಾಮಾ ಸೆಂಟರ್ ಸ್ಥಾಪಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅರ್ಚನಾ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts