ಬೆಂಗಳೂರು: ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ನವೆಂಬರ್ 29ರಂದು ಚಂಪಾ ಷಷ್ಠಿಯನ್ನು ಆಚರಿಸಲಾಗುತ್ತಿದೆ. ಇದೀಗ ಚಂಪಾಷಷ್ಠಿಯಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ನಡೆಗೆ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ ಮೇಲೆ, ಇಸ್ಲಾಮಿಕ್ ರಾಷ್ಟ್ರಗಳಿಂದ ಯಾವುದನ್ನು ಖರೀದಿ ಮಾಡಬೇಡಿ. ಒಂದು ಸಮಾಜ ಶಾಂತಿ ಇರಬೇಕು ಅಂದ್ರೆ ಎಲ್ಲಾ ಜಾತಿಯರು ಅನ್ಯಮಿತವಾಗಿರಬೇಕು ಅದು ಅವಶ್ಯಕತೆಯ ಜತೆಗೆ ಅನಿವಾರ್ಯ ಕೂಡ. ಇಲ್ಲದೇ ಹೋದಲ್ಲಿ ಎಲ್ಲಾ ಮುಸ್ಲಿಮರನ್ನು ಕೊಂದು, ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಜಾತ್ರಾ ಮಹೋತ್ಸಗಳು ನಡೆಯುವ ಸಂದರ್ಭದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ, ವಹಿವಾಟು ನಡೆಸುವ ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳಿಂದ ಧಾರ್ಮಿಕ ದತ್ತಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್ ಗೌಡ ಮನವಿ ಮಾಡಿದ್ದಾರೆ.
ಬೆಂಗಳೂರಿನ ಕಡಲೆಕಾಯಿ ಪರಿಷೆಯಲ್ಲಿ ಅನ್ಯ ಧರ್ಮಿಯರು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ಜಾತ್ರಾ ಮಹೋತ್ಸವಗಳು ಆರಂಭವಾಗಲಿದೆ. ಹೀಗಾಗಿ ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.
ಇದೇ ತಿಂಗಳು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾ ಷಷ್ಠಿ ಆಚರಣೆಯಲ್ಲಿಯೂ ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್ ಗೌಡ ಹೇಳಿದ್ದಾರೆ.