More

    ರೇರಾಗೆ 3 ವಾರದಲ್ಲಿ ಅಧ್ಯಕ್ಷ, ಸದಸ್ಯರ ನೇಮಕ : ಹೈಕೋರ್ಟ್‌ಗೆ ಸರ್ಕಾರ ಭರವಸೆ

    ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವುದಾಗಿ ಹೈಕೋರ್ಟ್‌ಗೆ ಸರ್ಕಾರ ಭರವಸೆ ನೀಡಿದೆ. ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಖ್ಯಸ್ಥರನ್ನು ನೇಮಿಸುವಂತೆ ಕೋರಿ ಬೆಂಗಳೂರಿನ ಮ್ಯಾಥ್ಯೂ ಥಾಮಸ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ರೇರಾದ ಓರ್ವ ಸದಸ್ಯ 2024ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ. ಆ ಹುದ್ದೆ ಜತೆ ಅಧ್ಯಕ್ಷರೂ ಸೇರಿ ಎಲ್ಲ ಸದಸ್ಯರನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಯಾವುದೇ ರೀತಿಯ ವಿಳಂಬವಿಲ್ಲದೆ ನೇಮಕ ಮಾಡುವ ಪ್ರಕ್ರಿಯೆ ಪ್ರಾರಂಭಿಸಬೇಕು, ಅವರು ಸದಸ್ಯರ ನಿವೃತ್ತಿ ನಂತರ ತಕ್ಷಣವೇ ಅಧಿಕಾರ ವಹಿಸಿಕೊಳ್ಳುವಂತಿರಬೇಕು ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

    ಈ ಹಿಂದೆ ನಡೆದ ವಿಚಾರಣೆ ವೇಳೆ, ನ್ಯಾಯಪೀಠ, ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸಲು ಹಾಗೂ ಅಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿಲ್ಲ. ರೇರಾದ ಸೆಕ್ಷನ್ 22ರ ಪ್ರಕಾರ ರಾಜ್ಯ ಸರ್ಕಾರ ಹುದ್ದೆಗಳನ್ನು ತುಂಬಿದರೆ ಪ್ರಕ್ರಿಯೆ ಮುಂದುವರಿಯಲಿದೆ. ರೇರಾ ಹೊರಡಿಸಿದ ಆದೇಶಗಳನ್ನು ಕಾಯ್ದೆಯ ಸೆಕ್ಷನ್ 44(5)ರ ಅಡಿ ಪ್ರಶ್ನಿಸಬಹುದಾಗಿದೆ. ಮೇಲ್ಮನವಿ ನ್ಯಾಯಾಧಿಕರಣವು 60 ದಿನಗಳ ಒಳಗಾಗಿ ಮೇಲ್ಮನವಿ ಇತ್ಯರ್ಥಪಡಿಸಬೇಕು.ಆದರೆ, ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ಸಕ್ಷಮ ಪ್ರಾಧಿಕಾರ ಮಾಡಿದ ಆದೇಶಗಳನ್ನು ಬಿಲ್ಡರ್ಸ್ಗಳು ಹೈಕೋರ್ಟ್‌ಗೆ ಸಲ್ಲಿಸುತ್ತಿದ್ದಾರೆ.

    ಅಲ್ಲದೆ, ಈ ಎಲ್ಲ ಅರ್ಜಿಗಳು ನ್ಯಾಯಾಧಿಕರಣದ ಮುಂದೆ ಸಲ್ಲಿಸಬೇಕಾಗಿದೆ. ನ್ಯಾಯಾಧಿಕರಣ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕೆ ಈ ನ್ಯಾಯಾಲಯದಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರವು ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ನ್ಯಾಯಾಧಿಕರಣ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಮೇಲ್ನೋಟಕ್ಕೆ ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆ ಎಂದು ಪೀಠ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts