ಶಿವಮೊಗ್ಗ: ಬೆಂಗಳೂರಿನಲ್ಲಿ ಮೇ 18ರಂದು ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ವಿಡಿಯೋ ಮತ್ತು ಪೋಟೋಗ್ರಾಫರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕ ಚನ್ನಪ್ಪ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಬಳಿಯಿದ್ದ ಕ್ಯಾಮರಾ ಮತ್ತಿತರ ಸಲಕರಣೆಗಳನ್ನು ಧ್ವಂಸ ಮಾಡಲಾಗಿದೆ. ಇದು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲ ಕಡೆ ಕಾರ್ಯನಿರ್ವಹಿಸುವ ಛಾಯಾಗ್ರಾಹಕರು ಹಾಗೂ ವಿಡಿಯೋ ಚಿತ್ರೀಕರಣ ಮಾಡುವವರಿಗೆ ಸರ್ಕಾರ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಕೆ.ಟಿ.ಶ್ರೀನಿವಾಸ್, ಮಾಜಿ ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷರಾದ ಎಚ್.ವಿ.ಮೋಹನ್, ಎಂ.ಬಿ.ಷಣ್ಮುಖ, ಪ್ರಧಾನ ಕಾರ್ಯದರ್ಶಿ ಜಿ.ಎಂ.ಲಿಂಗರಾಜು, ಕಾರ್ಯದರ್ಶಿ ಉಮೇಶ್, ನಿರ್ದೇಶಕರಾದ ಸತೀಶ್, ಅಶೋಕ್ ನಾಯಕ್, ಹರ್ಷ, ಈಶ್ವರ್ ಇದ್ದರು.