ಉಡುಪಿ: ರಾಜ್ಯಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕುಪತ್ರ ಒದಗಿಸಬೇಕು. ಈ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆ ಒದಗಿಸುವ ನಿಯಮವನ್ನು 2019ಕ್ಕೆ ಮಾರ್ಪಡಿಸಿ ಸಾವಿರಾರು ಕುಟುಂಬಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೋಮವಾರ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಂದಾಯ ಸಚಿವರನ್ನು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ 50 ಸೆಂಟ್ಸ್ಗಿಂತ ಕಡಿಮೆ ವಿಸ್ತೀರ್ಣದಲ್ಲಿ 11ಇ ನಕ್ಷೆ ಕೊಡಬಾರದೆಂಬ ಆದೇಶ ಹೊರಡಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ತಕ್ಷಣ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.
ಸಹಕಾರಿ ನ್ಯಾಯಾಲಯ: ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರ ಖಾತೆ ತೆರೆಯಬೇಕು. ತನ್ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್ನಲ್ಲಿ 4 ಸ್ಥಾನಗಳನ್ನು ಸಹಕಾರಿ ಕ್ಷೇತ್ರದ ಪ್ರತಿನಿಧಿಗಳಿಗೆ ಮೀಸಲಿಡಬೇಕು ಎಂದು ಸದನದಲ್ಲಿ ಯಶ್ಪಾಲ್ ಪ್ರಸ್ತಾಪಿಸಿದರು.