ಕೊಳ್ಳೇಗಾಲ: ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದಿಂದ ಮಂಗಳವಾರ ಪಟ್ಟಣದ ಕೆಯುಸಿ ಕ್ಲಬ್ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಮಾತನಾಡಿ, ಬಾಬಾ ಸಾಹೇಬರು ಇಡೀ ದೇಶದ ಆಸ್ತಿ. ದೀನ ದಲಿತರು, ಶೋಷಿತರು ಸೇರಿದಂತೆ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಬೇಕೆಂದು ಶ್ರಮಿಸಿ ಸಂವಿ ಧಾನವನ್ನು ನೀಡಿದ್ದಾರೆ. ಆ ಮೂಲಕ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟ ನಡೆಸಿದರು ಎಂದು ಸ್ಮರಿಸಿದರು.
ಎಂಎಲ್ಸಿ ಹುದ್ದೆ, ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶನದ ಹುದ್ದೆಗಳು ಅಧಿಕಾರದಿಂದ ವಂಚಿತರಾಗಿರುವ ಹಾಗೂ ಹಿಂದುಳಿದ ವರ್ಗಗಳಲ್ಲಿ ಗುರುತಿಸಿಕೊಂಡಿರುವ ಸಣ್ಣ ಸಣ್ಣ ಸಮಾಜದವರಿಗೆ ಸಿಗಬೇಕಿದೆ. ಆದರೆ, ಈ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಗ್ಗೂಡಿ ಬಾಬಾ ಸಾಹೇಬರ ಆಶಯಗಳನ್ನು ಪಾಲಿಸಬೇಕು ಎಂದರು.
ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿದ ಬಳಿಕ ಪುಷ್ಪಾರ್ಚನೆ ಮಾಡಲಾಯಿತು. ಜಿಪಂ ಮಾಜಿ ಸದಸ್ಯ ಕೊಪ್ಪಾಳಿ ಮಹದೇವ ನಾಯಕ, ನಗರಸಭೆ ಉಪಾಧ್ಯಕ್ಷ ಎ.ಪಿ.ಶಂಕರ್, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಕೆ.ಸಿ.ಗೋವಿಂದರಾಜು, ತಾಪಂ ಮಾಜಿ ಸದಸ್ಯ ಸಿದ್ದಪ್ಪಾಜಿ, ಮಧುವನಹಳ್ಳಿ ಗ್ರಾ.ಪಂ. ಅಧ್ಯಕ್ಷ ಸಿದ್ದಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಚಿಕ್ಕಬಸವಯ್ಯ, ಚೆನ್ನಶೆಟ್ಟಿ, ಮಧುಚಂದ್ರ, ಕುಮಾರಸ್ವಾಮಿ, ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ರಮೇಶ್ ಹಾಗೂ ಮಡಿವಾಳ ಸಮಾಜ, ಕುಂಬಾರ ಸಮಾಜ, ವಿಶ್ವಕರ್ಮ ಸಮಾಜ, ಈಡಿಗ ಸಮಾಜ, ಉಪ್ಪಾರ ಸಮಾಜ ಸೇರಿದಂತೆ ಹಿಂದುಳಿದ ವರ್ಗಕ್ಕೆ ವಿವಿಧ ಜನಾಂಗದ ಮುಖಂಡರು ಇದ್ದರು.