More

    ದೂರದೃಷ್ಟಿಯ ಮಹಾನ್ ನಾಯಕ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಬಣ್ಣನೆ

    ಮಂಡ್ಯ: ಭಾರತದ ಬಹುಜನ ಸಮಾಜದವರು ಸಾಮಾಜಿಕ, ಆರ್ಥಿಕ, ರಾಜಕೀಯ ಅವಕಾಶದಿಂದ ವಂಚಿತರಾಗುತ್ತಾರೆಂದು ಸ್ವಾತಂತ್ರ್ಯ ಚಳವಳಿಯ ಜತೆಗೆ ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನ್ ನಾಯಕ ಡಾ.ಬಾಬು ಜಗಜೀವನ ರಾಮ್ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಬಣ್ಣಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಮ್ ಅವರ 116ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
    ಭಾರತ ಬಹುತ್ವದ ನೆಲವೀಡು. ಈ ನೆಲದ ಸಾಮರಸ್ಯದ ಧಾತುಗಳು ಭವ್ಯವಾದವು. ಈ ಪರಂಪರೆ ಶಿಥಿಲವಾಗದಂತೆ ನೋಡಿಕೊಂಡು, ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಶ್ರೇಷ್ಟ ದೃಷ್ಟಿಕೋನ ಇಟ್ಟುಕೊಂಡವರು ಡಾ.ಬಾಬು ಜಗಜೀವನ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಎಂದರು.
    ಡಾ.ಬಾಬು ಜಗಜೀವನ ರಾಮ್ ಅವರು ಭಾರತೀಯ ಸ್ವಾತಂತ್ರ್ಯ ಚಳುವಳಿಗೆ ತಮ್ಮದೇ ಆದ ಕೊಡುಗೆಗಳನ್ನ ನೀಡುತ್ತಾ, ಸ್ವಾತಂತ್ರ್ಯ ನಂತರದಲ್ಲಿ ಬಹುತ್ವದ ಭಾರತ ಹೇಗಿರಬೇಕು ಎಂದು ದೂರದೃಷ್ಟಿವುಳ್ಳವರಾಗಿದ್ದರು. ಭಾರತದಿಂದ ಬ್ರಿಟಿಷರನ್ನು ಓಡಿಸಬೇಕೆಂದು ಹೋರಾಟ ನಡೆಯುತ್ತಿದ್ದಾಗ, ಮೊದಲು ಭಾರತೀಯ ಸಮಾಜದೊಳಗೆ ಇರುವ ಸಾಮಾಜಿಕ ಅಸಮಾನತೆಯನ್ನು ನಿವಾರಿಸಬೇಕು ಎಂದು ಪಣತೊಟ್ಟ ಹೋರಾಟ ನಡೆಸಿದರು. ಭವಿಷ್ಯದ ಭಾರತಕ್ಕಾಗಿ ತಮ್ಮೊಳಗಿನ ನೋವನ್ನ ತಾವೇ ನುಂಗಿ ರಾಷ್ಟ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ಕೊಟ್ಟವರು ಬುದ್ದ, ಬಸವ, ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರು ಎಂದು ಶ್ಲಾಘಿಸಿದ ಅವರು, 1951 ರಿಂದ 1986 ರವರೆಗೆ ಸತತವಾಗಿ 50 ವರ್ಷ ಸಂಸತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಕೆಲಸ ಮಾಡಿದರು. ಎಲ್ಲರೂ ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಅವಕಾಶ ಸೃಷ್ಟಿ ಮಾಡಿಕೊಳ್ಳುವ ಕಡೆ ಯೋಚನೆ ಮಾಡಿ ದೇಶದ ಚುಕ್ಕಾಣಿ ಹಿಡಿಯಬೇಕಿದೆ ಎಂದು ಹೇಳಿದರು.
    ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರೃ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ಅವರು ಸಚಿವರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಸಿರು ಕ್ರಾಂತಿ ಹರಿಕಾರರಾಗಿ ದೇಶಕ್ಕೆ ಹೊಸ ದಿಕ್ಕು ತೋರಿಸಿಕೊಟ್ಟರು. ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮಹಾನ್ ನಾಯಕರಾಗಿ ಮುಂಚೂಣಿಯಲ್ಲಿದ್ದರು. ಇವರ ತತ್ವ ಆದರ್ಶಗಳನ್ನು ನಾವುಗಳು ಮೈಗೂಡಿಸಿಕೊಂಡು ಮುನ್ನಡೆಯಬೇಕಿದೆ. ಸಮಾಜದಲ್ಲಿ ಧರ್ಮ ಜಾತಿಗಳ ನಡುವೆ ಘರ್ಷಣೆಗಳು ಉಂಟಾಗದಂತೆ ಮುನ್ನಡೆಯಲು ನಾವೂ ಒಂದೇ ಮನೋಭಾವ ಹಾಗೂ ಸಮಾನರು ಎಂಬ ದೃಷ್ಟಿಯಿಂದ ಮುಂದುವರೆಯಬೇಕಾಗುತ್ತದೆ ಎಂದು ಹೇಳಿದರು.
    ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿದ್ದಲಿಂಗೇಶ್, ತಹಸೀಲ್ದಾರ್ ವಿಜಯಕುಮಾರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ವಿನೋದಕುಮಾರ್ ಇತರರಿದ್ದರು.
    ಇದೇ ವೇಳೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉದ್ಯಾನದಲ್ಲಿರುವ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts