ಬಾಗಲಕೋಟೆ: ನಗರದ ಬಿವಿವಿ ಸಂಘದ ಪಿ.ಎಂ.ಎನ್.ಎಂ ದಂತ ಮಹಾವಿದ್ಯಾಲಯ ಆವರಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ವಿದ್ಯಾರ್ಥಿಗಳ ನೂತನ ವಸತಿಗೃಹವನ್ನು ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕೆ.ರಾಜೇಂದ್ರ ಎಸ್ಪಿ ಲೋಕೇಶ ಜಗಲಾಸರ್ ಸೋಮವಾರ ಜಂಟಿಯಾಗಿ ಉದ್ಘಾಟಿಸಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಅಂತಸ್ತುಗಳಲ್ಲಿ ನಿರ್ಮಾಣಗೊಂಡ ವಿದ್ಯಾರ್ಥಿಗಳ ವಸತಿಗೃಹದಲ್ಲಿ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಒಟ್ಟು 184 ಕೊಠಡಿಗಳಲ್ಲಿ 552 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಪ್ರತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಲಾಕರ್, ಬೆಡ್, ಕಂಪ್ಯೂಟರ್ ಟೇಬಲ್, ರೀಡಿಂಗ್ ಟೇಬಲ್ ಮತ್ತು ಕುರ್ಚಿಗಳ ಸೌಕರ್ಯ ನೀಡಲಾಗಿದೆ. 24 ಗಂಟೆಯೂ ಶುದ್ಧ ಕುಡಿಯುವ ನೀರು, ಹಾಟ್ ವಾಟರ್, ವಿದ್ಯುತ್ ಮತ್ತು ವೈಪೈ ಸೌಲಭ್ಯವಿದೆ. ಎರಡು ಲ್ಟಿಗಳನ್ನು ಕೂಡ ಅಳವಡಿಸಲಾಗಿದೆ. ಏಕಕಾಲಕ್ಕೆ 500 ವಿದ್ಯಾರ್ಥಿಗಳು ಕುಳಿತು ಊಟ ಮಾಡುವ ವಿಶಾಲವಾದ ಅಡುಗೆ ಕೊಠಡಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಹಾಸ್ಟೆಲ್ ಕಮಿಟಿ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ (ಚಿತ್ತರಗಿ), ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ, ಡಾ.ಎಚ್.ಬಿ.ಸೊಲಬನ್ನವರ್ ಇದ್ದರು.