ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ದಲಿತರ ಕೊಡುಗೆ ಅಪಾರ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್.ಸಿ. ವಿಭಾಗದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರೃದ ನಂತರ ದೇಶವನ್ನು ಕಟ್ಟಿ ಬೆಳೆಸುವಲ್ಲಿ ಕಾಂಗ್ರೆಸ್ ಪಾತ್ರ ಹಿರಿದು. ಅಲ್ಲದೆ, ದಲಿತ ಜನಾಂಗದ ಬೆಳವಣಿಗೆಗಾಗಿ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಾಬುಜಗಜೀವನ್ರಾಂ ನಿಗಮ, ಆದಿಜಾಂಬವ ಸೇರಿ ಮತ್ತಿತರರ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿತು. ಆದರೆ, ಬಿಜೆಪಿ ಸರ್ಕಾರ ದಲಿತರ ಅಭಿವೃದ್ಧಿಗಾಗಿ ಯಾವುದೇ ಕಾರ್ಯಕ್ರಮವನ್ನು ರೂಪಿಸಿಲ್ಲ. ದಲಿತರ ಬಗ್ಗೆ ಮಾತಿನಲ್ಲಿಯೇ ಕಾಳಜಿ ತೋರಿಸುತ್ತಿದೆ ಎಂದು ಟೀಕಿಸಿದರು.
ಮಾಜಿ ಸಚಿವ ಎಚ್.ವೈ. ಮೇಟಿ ಮಾತನಾಡಿ, ನಾನು ಶಾಸಕನಾಗಿದ್ದಾಗ ದಲಿತರ ಏಳಿಗೆಗೆ ಆದ್ಯತೆ ನೀಡಿದ್ದೇನು. ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಸಾಲಮನ್ನಾ ಮಾಡಿ ಅವರನ್ನು ಋಣಮುಕ್ತರನ್ನಾಗಿಸಿ ಇತಿಹಾಸ ನಿರ್ಮಿಸಿದ್ದರು. ಪಕ್ಷ ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಾಜು ಎಸ್.ಮನ್ನಿಕೇರಿ, ಉಪಾಧ್ಯಕ್ಷ ಗೋಪಾಲ ಚವಾಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ, ಗ್ರಾಮೀಣ ಘಟಕದ ಬ್ಲಾಕ್ ಅಧ್ಯಕ್ಷ ಎಸ್.ಎನ್.ರಾಂಪುರ, ಮುಖಂಡರಾದ ಚಂದ್ರಶೇಖರ ರಾಠೋಡ, ತಮ್ಮಣ್ಣ ಮಾಂಗ, ಬಸವರಾಜ ಹಳ್ಳದಮನಿ, ಸುರೇಶ ಮಣ್ಣೇರಿ, ಸತ್ಯಪ್ಪ ದಳವಾಯಿ, ಅಡಿವೆಪ್ಪ ಚಂದಾವರಿ, ರಾಜು ಎಂ.ರಾಠೋಡ, ಉಮೇಶ ಲಮಾಣಿ, ಚೇತನ ದೊಡಮನಿ ಉಪಸ್ಥಿತರಿದ್ದರು.