More

    ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಉಚಿತ ಚಿಕಿತ್ಸೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ತರಲು ಏ. 29 ರಿಂದ ಬಾಗಲಕೋಟೆ ಬಿವಿವಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭಿಸಲು ನಿರ್ಧರಿಸಲಾಗಿದೆ.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಸಂಸದ ಪಿ.ಸಿ.ಗದ್ದಿಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ವೀರಣ್ಣ ಚರಂತಿಮಠ ಅವರ ಜತೆ ಸಮಾಲೋಚನೆ ನಡೆಸಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲು ತೀರ್ಮಾನಿಸಲಾಯಿತು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಈಗಾಗಲೇ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯಲ್ಲಿ 135 ಆಕ್ಸಿಜನ್ ಬೆಡ್ ಹಾಗೂ 320 ಜನರಲ್ ಬೆಡ್ ಸೇರಿ ಒಟ್ಟು 500 ಬೆಡ್‌ಗಳ ವ್ಯವಸ್ಥೆ ಇದೆ. 15 ಸಾವಿರ ಕಿಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಸ್ಟಾಕ್ ಇದ್ದು, ಪ್ರತಿದಿನ 900 ಕೆಜಿ ಸಿಲಿಂಡರ್‌ಗಳ ವ್ಯವಸ್ಥೆ, 12 ವೆಂಟಿಲೇಟರ್ ಇರುವುದಾಗಿ ಸಭೆಗೆ ತಿಳಿಸಿದರು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಕುಮಾರೇಶ್ವರ ಆಸ್ಪತ್ರೆಯಲ್ಲಿ ಎಲ್ಲ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಿಲ್ಲ. ಸರ್ಕಾರದಿಂದ ಶಿಫಾರಸು ಮಾಡಲಾದ ಕೋವಿಡ್ ರೋಗಿಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಚಿಕಿತ್ಸೆ ದೊರೆಯಲಿದ್ದು, ಆ ವೆಚ್ಚವನ್ನು ಸರ್ಕಾರದಿಂದ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸುವರ್ಣ ಆರೋಗ್ಯ ಟ್ರಸ್ಟ್ (ಎಬಿಪಿಕೆ) ಮೂಲಕ ಪಾವತಿ ಮಾಡಲಾಗುತ್ತಿದೆ. ನೇರವಾಗಿ ಕೋವಿಡ್ ಚಿಕಿತ್ಸೆಗೆ ಒಳಗಾದಲ್ಲಿ ಅಂತಹ ರೋಗಿಗಳಿಗೆ ಸರ್ಕಾರ ನಿಗದಿಪಡಿಸಿದ ರಿಯಾಯಿತಿ ದರದಲ್ಲಿ ಕುಮಾರೇಶ್ವರ ಚಿಕಿತ್ಸೆ ನೀಡಲಾಗುತ್ತಿದ್ದು, ಅದನ್ನು ರೋಗಿಗಳು ಪಾವತಿ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

    ಕುಮಾರೇಶ್ವರ ಆಸ್ಪತ್ರೆಯಲ್ಲಿ ಆರೋಗ್ಯ ಮಿತ್ರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಆಸ್ಪತ್ರೆ ಮುಖ್ಯದ್ವಾರದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು. ಕೋವಿಡ್ ಚಿಕಿತ್ಸೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಫ್ರಂಟ್‌ಲೈನ್ ವರ್ಕರ್ಸ್‌ಗಳಿಗೆ ಇನ್ಶುರೆನ್ಸ್‌ಗೆ ಒಳಪಡಿಸಲು ಕ್ರಮ ಜರುಗಿಸುವಂತೆ ತಿಳಿಸಲಾಯಿತು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿ.ಪಂ ಸಿಇಒ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಬಿವಿವಿ ಸಂಘದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪುರ, ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಅಶೋಕ ಸಜ್ಜನ (ಬೇವೂರ), ಬಿವಿವಿ ಸಂಘದ ಆಯುರ್ವೇದಿಕ್ ಕಾಲೇಜಿನ ಪ್ರಾಚಾರ್ಯ ಡಾ.ದಿಲೀಪ್ ನಾಟಿಕಾರ ಸೇರಿ ಇತರರು ಉಪಸ್ಥಿತರಿದ್ದರು.

    ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಕಠಿಣ ಸಂದರ್ಭದಲ್ಲಿ ಎಲ್ಲರ ಜೀವ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆಕ್ಸಿಜನ್, ಬೆಡ್‌ಗಳ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು.
    – ಪಿ.ಸಿ.ಗದ್ದಿಗೌಡರ ಸಂಸದ

    ಅನೇಕ ಸಂಕಷ್ಟ ಸಂದರ್ಭಗಳಲ್ಲಿ ಬಿವಿವಿ ಸಂಘ ನೆರವಿಗೆ ನಿಂತಿದೆ. ಇದೀಗ ಕೋವಿಡ್ ಎರಡನೇ ಅಲೆ ಹೆಚ್ಚಾಗಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕುಮಾರೇಶ್ವರ ಆಸ್ಪತ್ರೆಯನ್ನು ಕೋವಿಡ್ ಚಿಕಿತ್ಸೆಗಾಗಿ ಮೀಸಲಿಡಲಾಗುತ್ತಿದೆ.
    – ವೀರಣ್ಣ ಚರಂತಿಮಠ ಬಾಗಲಕೋಟೆ ಶಾಸಕ

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts