More

    ಸರಳ ಆಚರಣೆಗೆ ನಿರ್ಧಾರ

    ಬಾಗಲಕೋಟೆ: ಕೋವಿಡ್ ಹಿನ್ನೆಲೆಯಲ್ಲಿ ಏ.5 ರಂದು ಡಾ.ಬಾಬು ಜಗಜೀವನ್‌ರಾಮ್ 114ನೇ ಜಯಂತಿ ಹಾಗೂ ಏ. 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಜಯಂತ್ಯುತ್ಸವ ಆಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವರ್ಷ ಸಹ ಕೋವಿಡ್ 2ನೇ ಅಲೆಯಿಂದ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗ ಸೂಚಿಯನ್ವಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಮುದಾಯದವರು ಸೀಮಿತವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಭೆಯಲ್ಲಿ ಕೋರಿದರು.

    ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಗಜೀವನ್‌ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಬೇಕು. ಅಂಬೇಡ್ಕರ್ ಜಯಂತಿಯಂದು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪ ಅರ್ಪಿಸಿ ನಂತರ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾತನಾಡಿ, ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮೆರವಣಿಗೆ ಮಾಡುವುದನ್ನು ಸರ್ಕಾರ ನಿಷೇಧಿಸಿದೆ. ಸರ್ಕಾರ ಹೊರಡಿಸಿದ ನಿಯಮಗಳನ್ನು ಪಾಲಿಸುವ ಮೂಲಕ ಅರ್ಥಪೂರ್ಣವಾಗಿ ಜಗಜೀವನ್‌ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಿಸೋಣ ಎಂದರು.

    ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಸರ್ಕಾರ ಮಾ. 14 ರಿಂದ ಏ.14 ವರೆಗೆ ಪರಿವರ್ತನಾ ಮಾಸಾಚರಣೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ವಿವಿಧ ವಸತಿ ನಿಲಯಗಳ ಸ್ವಚ್ಛತೆ ಕಾರ್ಯ, ಸಸಿ ನೆಡುವುದು, ವಸತಿ ನಿಲಯ ಆವರಣದಲ್ಲಿ ಕೈತೋಟ ನಿರ್ಮಾಣ, ಹಸಿಕಸ ಮತ್ತು ಒಣ ಕಸ ಬೇರ್ಪಡಿಸುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಜತೆಗೆ ರಸಪ್ರಶ್ನೆ ಕಾರ್ಯಕ್ರಮ ಸಹ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

    ಸಮುದಾಯದ ಮುಖಂಡರು ಹಾಗೂ ಯುವಕರು ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರಾದ ಸಂಜು ಐಹೊಳ್ಳಿ, ಮುತ್ತಣ್ಣ ಬೆಣ್ಣೂರ, ವೈ.ವೈ.ತಿಮ್ಮಾಪುರ, ವೈ.ಸಿ.ಕಾಂಬಳೆ, ಸಂತೋಷ ದೊಡಮನಿ ಇತರರು ಉಪಸ್ಥಿತರಿದ್ದರು.



    ಸರಳ ಆಚರಣೆಗೆ ನಿರ್ಧಾರ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts