More

    ಸದೃಢ ಭಾರತ ನಿರ್ಮಾಣಕ್ಕೆ ಮತದಾನ ಅವಶ್ಯ

    ಬಾಗಲಕೋಟೆ: ಪ್ರಜಾಪ್ರಭುತ್ವ ಗಟ್ಟಿಗೊಳಿಸಲು, ಸದೃಢ ಭಾರತ ನಿರ್ಮಾಣಕ್ಕೆ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಕಟ್ಟಿ ಹೇಳಿದರು.

    ಜಿಲ್ಲಾಡಳಿತ ಭವನದಲ್ಲಿರುವ ನೂತನ ಸಭಾಭವನದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಧರ್ಮ-ಭೇದಗಳನ್ನು ಲೆಕ್ಕಿಸದೆ ನಿರ್ಭಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆ, ಗ್ರಾಮಗಳ ಪ್ರಗತಿ ಬಗ್ಗೆ ಅರಿವು ಇದ್ದ ನಾಗರಿಕರು ಮತದಾನದಿಂದ ಹಿಂದುಳಿಯಬಾರದು. ಮತದಾನ ಮಾಡುವುದರಿಂದ ನಮ್ಮ ವ್ಯಕ್ತಿತ್ವವನ್ನು ನಾವು ಗುರುತಿಸಿಕೊಂಡಂತಾಗುತ್ತದೆ. ಮತ ಚಲಾಯಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದ್ದು, ರಾಜಕಾರಣಿಗಳ ಕುರಿತು ಟೀಕೆ ಟಿಪ್ಪಣಿಗಳನ್ನು ಮಾಡುವ ಮೊದಲು ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಮತದಾರನಿಗೆ ಇದೆ ಎಂದು ತಿಳಿಸಿದರು.

    ಪ್ರೊ.ಈರಣ್ಣ ಎನ್.ಕುಡಚಿ ಉಪನ್ಯಾಸ ನೀಡಿ, ಮತದಾನದ ದಿನ ಎಂಬುದು ಒಂದು ರಾಷ್ಟ್ರೀಯ ಹಬ್ಬವಾಗಿದ್ದು, ಇದನ್ನು ಎಲ್ಲರೂ ಆಸಕ್ತಿಯಿಂದ ಭಾಗವಹಿಸಬೇಕು. ವಿದೇಶಗಳಲ್ಲಿ 21 ವರ್ಷದ ನಂತರ ಮತದಾನದ ಹಕ್ಕು ದೊರೆಯುತ್ತಿದೆ. ಆದರೆ, ಭಾರತದಲ್ಲಿ 18 ವರ್ಷಕ್ಕೆ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇದರಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಸಲಹೆ ಮಾಡಿದರು.
    ಜಿಪಂ ಸಿಇಒ ಗಂಗೂಬಾಯಿ ಮಾನಕರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಇತರರು ಇದ್ದರು.

    ಕಾರ್ಯಕ್ರಮದಲ್ಲಿ ಮತದಾನದ ಕುರಿತು ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಹಾಗೂ ಮತದಾರರ ನೋಂದಣಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

    ಇಂದಿನ ಮತದಾರರು ತಮ್ಮ ಮತವನ್ನು ಯಾವುದೇ ಆಮಿಷಗಳಿಗೆ ಬಲಿಕೊಡದೇ ದೇಶದ ಅಭಿವೃದ್ಧಿಗೆ ಉತ್ತಮ ನಾಯಕರ ಆಯ್ಕೆಗೆ ತಪ್ಪದೇ ಮತ ಚಲಾಯಿಸಬೇಕು. ಅನಕ್ಷರಸ್ಥರಲ್ಲಿ ಮತದಾನದ ಕುರಿತು ತಿಳುವಳಿಕೆ ಮೂಡಿಸುವುದು ಅವಶ್ಯವಾಗಿದೆ.
    – ಸಂತೋಷ ಸಿ.ಬಿ., 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts