More

    ತುರ್ತು ಪರಿಸ್ಥಿತಿ ನಿರ್ವಹಿಸಲು ಸಜ್ಜಾಗಿ

    ಬಾಗಲಕೋಟೆ: ಮಳೆಗಾಲ ಆರಂಭವಾಗಿದ್ದು ಪ್ರವಾಹ ಹಾಗೂ ಅತಿವೃಷ್ಟಿಯಂತಹ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣಕ್ಕೆ ಜನರ ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಡಿಸಿ ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹವಾಮಾನ ಇಲಾಖೆಯು ಕಾಲಕಾಲಕ್ಕೆ ಮನೆ ಮುನ್ಸೂಚನೆ ಹಾಗೂ ಹವಾಮಾನ ವರದಿ ನೀಡಲಿದ್ದು, ಈ ವರದಿಯನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಪ್ರವಾಹ ನಿರ್ವಹಣೆಯಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸಿದ್ದು, ಈ ಬಾರಿ ಕೂಡ ಅದೇ ರೀತಿಯಲ್ಲಿ ತಂಡಗಳನ್ನು ರಚಿಸಬೇಕು ಎಂದರು.

    ತುರ್ತು ಸಂದರ್ಭಗಳಲ್ಲಿ ನದಿತೀರದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಬೋಟ್‌ಗಳ ಕುರಿತು ಎಲ್ಲ ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ತುರ್ತು ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಲು ಹಾಗೂ ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎದು ಹೇಳಿದರು.

    ದಿನದ 24 ಗಂಟೆ ಕಂಟ್ರೋಲ್ ರೂಮ್ ಸ್ಥಾಪನೆ
    ತುರ್ತು ಸಂದರ್ಭದಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಎಲ್ಲ ತಾಲ್ಲೂಕು ತಹಸೀಲ್ದಾರರ ಕಾರ್ಯಾಲಯದಲ್ಲಿ ನಿತ್ಯ 24 ಗಂಟೆಗಳ ಕಂಟ್ರೋಲ್ ರೂಮ್ ಸ್ಥಾಪಿಸಬೇಕು. ಈ ಕಂಟ್ರೋಲ್ ರೂಮ್‌ಗಳು ಜಿಲ್ಲಾಮಟ್ಟದ ಕಂಟ್ರೋಲ್ ರೂಮ್ ಜತೆಗೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಲಾದ ತಾಲೂಕುಗಳಿಗೆ ತೆರಳಿ ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸುವ ಮೂಲಕ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಹಿತಿಯನ್ನು ನೀಡಬೇಕು ಎಂದರು.

    ಜಲಾಶಯ ಮಟ್ಟದ ಮೇಲೆ ನಿರಂತರ ನಿಗಾ
    ಜಿಲ್ಲೆಯ ಹಾಗೂ ನೆರೆಯ ಮಹಾರಾಷ್ಟ್ರದ ಜಲಾಶಯಗಳ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಜಲಾಶಯ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮುಂಚಿತವಾಗಿಯೇ ಜನರಿಗೆ ತಿಳಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಇದರಿಂದ ಸಮಸ್ಯೆಗಳು ಉಂಟಾಗದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
    ಜಿ.ಪಂ ಸಿಇಒ ಟಿ.ಭೂಬಾಲನ ಮಾತನಾಡಿ, ಮಳೆಗಾಲದಲ್ಲಿ ರಸ್ತೆಬದಿಯ ಮರಗಳು ಬಿದ್ದು ಸಂಚಾರಕ್ಕೆ ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಮಳೆಗಾಲ ಆರಂಭವಾಗುವುದಕ್ಕೆ ಮುಂಚೆಯೇ ಈ ಬಗ್ಗೆ ಗಮನಹರಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ಜನರ ರಕ್ಷಣೆಗೆ ಎಲ್ಲ ಅಗತ್ಯ ನೆರವು ನೀಡಲಾಗುವುದು. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ವಿಶೇಷವಾಗಿ ಗಮನ ಹರಿಸಬೇಕು ಎಂದು ಹೇಳಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಸೀಲ್ದಾರ ಎಸ್.ಎಸ್.ನಾಯ್ಕಲಮಠ, ನಗರಾಭಿವೃದ್ಧ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿ ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು.

    ಈ ಬಾರಿ ಕೋವಿಡ್ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿರುವುದರಿಂದ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರವಾಹ ಪರಿಹಾರ ಕೇಂದ್ರ ನಿರ್ವಹಣೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಹಾರ ಕೇಂದ್ರಗಳಲ್ಲಿ ಸೂಕ್ತ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್, ಸ್ಯಾನಿಟೈಸರ್ ವಿತರಣೆಗೆ ಕ್ರಮ ವಹಿಸಬೇಕು.
    – ಕೆ.ರಾಜೇಂದ್ರ ಜಿಲ್ಲಾಧಿಕಾರಿ

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts