ಮಂಗಳೂರು: ಬಂಟ್ವಾಳದ ತೆಂಕಕಜೆಕಾರಿನ ಕೆಳಗಿನ ಕಾರ್ಲ ಎಂಬಲ್ಲಿ ವೈಯುಕ್ತಿಕ ದ್ವೇಷದಿಂದ ಕೊಲೆ ಮಾಡಿದ ಆರೋಪ ಮಂಗಳೂರಿನ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಜೀವಾವಧಿ ಕಠಿಣ ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.
ತೆಂಕಕಜೆಕಾರು ನಿವಾಸಿ ಸಿದ್ಧಿಕ್(34) ಶಿಕ್ಷೆಗೆ ಒಳಗಾದ ಅಪರಾಧಿ. ಮಹಮ್ಮದ್ ರಫೀಕ್(20) ಎಂಬವರನ್ನು ಕೊಲೆ ಮಾಡಿದ್ದ.
* ಪ್ರಕರಣದ ಹಿನ್ನೆಲೆ: 2021ರ ಸೆಪ್ಟೆಂಬರ್ 12ರಂದು ಸಂಜೆ ಅಪರಾಧಿ ಸಿದ್ದೀಕ್, ರಫೀಕ್ನನ್ನು ಸಿಗರೇಟ್ ಸೇದುವ ನೆಪದಲ್ಲಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ತನ್ನ ಮನೆಗೆ ಹೋಗಿ ರಕ್ತಸಿಕ್ತ ಬಟ್ಟೆಯನ್ನು ಬದಲಾಯಿಸಿದ್ದಲ್ಲದೆ, ಮೃತ ರಫೀಕ್ನ ಮನೆಗೆ ತೆರಳಿ ಆತನ ತಾಯಿಯಲ್ಲಿ ಕೇಳಿ ಊಟ ಕೂಡ ಮಾಡಿದ್ದನು. ಆಗ ಪುತ್ರನ ಬಗ್ಗೆ ತಾಯಿ ಬಿಫಾತುಮ್ಮ ವಿಚಾರಿಸಿದಾಗ ಗೊತ್ತಿಲ್ಲ ಎಂದಿದ್ದನು. ಬಳಿಕ ಸ್ನೇಹಿತ ಫಯಾಜುದ್ದೀನ್ನಲ್ಲಿ ಸುಳ್ಳು ಹೇಳಿ ಆತನ ಕಾರನ್ನು ಪಡೆದು ಕಾರಿನಲ್ಲಿ ರಫೀಕ್ನ ಮೃತದೇಹವನ್ನು ದೇವಸ್ಯ ಮೂಡೂರಿನ ನೀರೊಲ್ಬೆಯ ಮೋರಿಯ ಕೆಳಗೆ ಬಿಸಾಡಿ ಮನೆಗೆ ಬಂದಿದ್ದನು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಪುಂಜಾಲಕಟ್ಟೆ ಠಾಣಾ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಅಭಿಯೋಜನೆ ಪರ ಒಟ್ಟು 19 ಸಾಕ್ಷಿಗಳನ್ನು ವಿಚಾರಿಸಲಾಗಿದೆ. 57 ದಾಖಲೆ, 14 ವಸ್ತುಗಳನ್ನು ಗುರುತಿಸಲಾಗಿದೆ. ಈ ಬಗ್ಗೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಶಿಕ್ಷೆ ಪ್ರಕಟಿಸಿದ್ದಾರೆ.
ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 302ರ ಪ್ರಕಾರ ಜೀವಾವಧಿ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, ಭಾರತೀಯ ದಂಡ ಸಂಹಿತೆ ಕಲಂ 201ರಂತೆ 7 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೃತನ ತಾಯಿಗೆ ಪರಿಹಾರ ನೀಡುವಂತೆಯೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಸರ್ಕಾರದ ಪರವಾಗಿ ಕೆಲವು ಸಾಕ್ಷಿಗಳ ವಿಚಾರಣೆಯನ್ನು ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪಿ.ನಾಯ್ಕ ಮತ್ತು ಬಿ.ಶೇಖರ ಶೆಟ್ಟಿ, ಉಳಿದ ಸಾಕ್ಷಿಗಳನ್ನು ಸರ್ಕಾರಿ ಅಙಭಿಯೋಜಕ ಚೌಧರಿ ಮೋತಿಲಾಲ್ ವಿಚಾರಿಸಿ ವಾದ ಮಂಡಿಸಿದ್ದರು.
ಪಾಪಪ್ರಜ್ಞೆ ಕಾಡಿ ಠಾಣೆಗೆ ಶರಣಾಗಿದ್ದ
ವೈಯಕ್ತಿಕ ಕಾರಣಕ್ಕೆ ರಾತ್ರಿ ಕೊಲೆ ಮಾಡಿದ್ದ ಆರೋಪಿ ಸಿದ್ಧಿಕ್ ಮರುದಿನ ಬೆಳಗ್ಗೆ ತಾನೇ ಪೊಲೀಸ್ ಠಾಣೆಗೆ ತೆರಳಿ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿದ್ದ. ರಾತ್ರಿ ಇಡೀ ಪಾಪಪ್ರಜ್ಞೆ ಕಾಡಿ ನಿದ್ರೆ ಬಾರದೆ ಚಟಪಡಿಸಿದ್ದನು. ಮರುದಿನ ನೇರವಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾನೇ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿ ಶರಣಾಗಿದ್ದನು. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲು ಸಾಂದರ್ಭಿಕ ಸಾಕ್ಷ್ಯ ಹಾಗೂ ವೈಜ್ಞಾನಿಕ ದಾಖಲೆಗಳನ್ನು ಬಳಸಿಕೊಳ್ಳಲಾಗಿದೆ. ಆರೋಪಿ ಮತ್ತು ಕೊಲೆಗೀಡಾದ ವ್ಯಕ್ತಿ ಒಟ್ಟಿಗೆ ಹೊರಗೆ ತೆರಳಿರುವುದನ್ನು ಮೃತನ ತಾಯಿ ನೋಡಿದ್ದು, ಅದನ್ನೇ ಸಾಂದರ್ಭಿಕ ಸಾಕ್ಷಿ ಎಂದು ಬಳಸಿಕೊಳ್ಳಲಾಗಿದೆ.
———–