More

    ಬಸವೇಶ್ವರರ ಆದರ್ಶ ಎಲ್ಲರಿಗೂ ಮಾದರಿ

    ಬಳ್ಳಾರಿ: ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ ಆದರ್ಶ ಜೀವನ ನಮಗೆಲ್ಲ ಮಾದರಿಯಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಶನಿವಾರ ನಡೆದ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.

    ಬಸವಣ್ಣ ಅವರು ಲಿಂಗ, ಜಾತಿ ಮತ್ತು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಹೊಸ ಜೀವನ ವಿಧಾನವನ್ನು ಪ್ರತಿಪಾದಿಸಿದವರು ಎಂದರು.

    ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಬಸವಣ್ಣ ಅವರು ಎಲ್ಲ ವರ್ಗದ ಜನರ ಶೋಷಣೆ ವಿರುದ್ಧ ಹೋರಾಡಿದವರು. ಆದರ್ಶ ಸಮಾಜದ ಪರಿಕಲ್ಪನೆ ಮೂಡಿಸಿದವರು ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಠಿರುದ್ರಪ್ಪ ಮಾತನಾಡಿ, 12ನೇ ಶತಮಾನದಲ್ಲಿಯೇ ಶೋಷಣೆ ವಿರುದ್ಧ ಧ್ವನಿ ಎತ್ತಿದವರು. ಕಾಯಕ, ನಿಷ್ಠೆಗಳಿಂದ ಎಲ್ಲರೂ ಗೌರವದಿಂದ ಮತ್ತು ಸಮಾನರಾಗಿ ಬಾಳ್ವೆ ನಡೆಸಬೇಕು ಎಂದು ತೋರಿಸಿಕೊಟ್ಟವರು ಎಂದರು.

    ಬಸವಣ್ಣ ಅವರ ವಚನಗಳು ಕನ್ನಡ ಸಾಹಿತ್ಯದ ವಿಶಿಷ್ಟ ರೂಪವಾಗಿದ್ದು, ಕನ್ನಡ ಸಾಹಿತ್ಯವನ್ನಿ ಶ್ರೀಮಂತಗೊಳಿಸಿವೆ. ಜನರಲ್ಲಿ ಜಾಗೃತಿ ಮೂಡಿಸುತ್ತಾ ಸಾಮಾಜಿಕ ಸುಧಾರಣೆಗಳಿಗೆ ಅಡಿಪಾಯ ಹಾಕಿದವರು ಎಂದು ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣ ಅವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿರುವುದು ಸಂತೋಷದ ವಿಷಯ ಎಂದು ಅಭಿಮತ ವ್ಯಕ್ತಪಡಿಸಿದರು.

    ಕೆ.ದೊಡ್ಡ ಬಸಪ್ಪ ಗವಾಯಿ ಅವರು ಬಸವಣ್ಣ ಅವರ ಕುರಿತ ವಚನ ಗಾಯನ ಪ್ರಸ್ತುತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಮುಖಂಡರು, ಇನ್ನಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts