ನವದೆಹಲಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜನರು ನೀಡಿದ ತೀರ್ಪನ್ನು ಸ್ವೀಕರಿಸುತ್ತೇನೆ ಮತ್ತು ನಮ್ಮ ಸಿದ್ಧಾಂತದ ಹೋರಾಟ ಮುಂದುವರಿಯಲಿದೆ ಎಂದು ಎಂದು ಕಾಂಗ್ರೆಸ್ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಹೇಳಿದರು.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾವು ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಮ್ಮ ಸಿದ್ಧಾಂತದ ಯುದ್ಧ ಮುಂದುವರಿಯುತ್ತದೆ ಎಂದಿರುವ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಪಕ್ಷದ ಗೆಲುವಿನ ಕುರಿತು, ತೆಲಂಗಾಣ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಾಲು ತೆಲಂಗಾಣ ಮಾಡುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದಿದ್ದಾರೆ.
ಚುನಾವಣೆಯಲ್ಲಿ ತಮ್ಮ ಶ್ರಮ ಮತ್ತು ಬೆಂಬಲಕ್ಕಾಗಿ ಎಲ್ಲ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ರಾಹುಲ್ ಗಾಂಧಿ ತಿಳಿಸಿದ್ದಾರೆ.
मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं – विचारधारा की लड़ाई जारी रहेगी।
तेलंगाना के लोगों को मेरा बहुत धन्यवाद – प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
— Rahul Gandhi (@RahulGandhi) December 3, 2023
ದೊರಲು (ಜಮೀನುದಾರರು) ಗಾಗಿ ಕೆಲಸ ಮಾಡುವವರ ವಿರುದ್ಧ ಹೋರಾಡುವುದು ಮತ್ತು ಪ್ರಜಾಲು (ಸಾಮಾನ್ಯ ಪ್ರಜೆಗಳು) ಪರ ಕೆಲಸ ಮಾಡುವುದು ಕಾಂಗ್ರೆಸ್ನ ತೆಲಂಗಾಣ ಅಭಿಯಾನದ ಮುಖ್ಯ ವಿಷಯವಾಗಿತ್ತು. ಇದೀಗ ಗೆಲುವು ಸಾಧಿಸಿ, ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ.
ಕಾಂಗ್ರೆಸ್ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಆದರೆ, ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿಗಳು ಸಹ ತೆಲಂಗಾಣದಲ್ಲಿ ಪ್ರಭಾವ ಬೀರಿದೆ ಎಂದು ಹೇಳಲಾಗುತ್ತಿದೆ.
ಇನ್ನು ಫಲಿತಾಂಶದ ವಿಚಾರಕ್ಕೆ ಬಂದರೆ, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್)ಗೆ ತೆಲಂಗಾಣ ಮತದಾರರು ಶಾಕ್ ನೀಡಿದ್ದು, ಈ ಬಾರಿ ಕಾಂಗ್ರೆಸ್ ಮೇಲೆ ತಮ್ಮ ಒಲವು ತೋರಿದ್ದಾರೆ. ಅಖಂಡ ಆಂಧ್ರಪ್ರದೇಶದಿಂದ ಇಬ್ಭಾಗವಾಗಿ ಸ್ವತಂತ್ರ ತೆಲಂಗಾಣ ರಾಜ್ಯ ರಚನೆಯಾದಾಗಿನಿಂದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್ಎಸ್ ಪಕ್ಷ ಆಡಳಿತದಕಲ್ಲಿತ್ತು. ಎರಡು ದಶಕಗಳ ಆಡಳಿತಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ.
ಒಟ್ಟು 119 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ಬಿಆರ್ಎಸ್ ಕೇವಲ 39 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. (ಏಜೆನ್ಸೀಸ್)
ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ಮೋದಿ
ಮತಎಣಿಕೆ ನಡುವೆ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರ ಭೇಟಿ: ಡಿಜಿಪಿ ಅಂಜನಿ ಕುಮಾರ್ ಸಸ್ಪೆಂಡ್