ಹೊಸಪೇಟೆ: ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ ಸಿಂಗ್ ರಾಜೀನಾಮೆ ನೀಡಿದ್ದಾರೆನ್ನುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಜಕೀಯ ಮತ್ತು ಸಹಕಾರ ಕ್ಷೇತ್ರದಲ್ಲಿ ಚರ್ಚೆಗೆ ಕಾರಣವಾಗಿದೆ.
ಬ್ಯಾಂಕ್ನ ಅಧಿಕಾರಾವಧಿ ಮುಗಿಯಲು ಎರಡು ತಿಂಗಳು ಬಾಕಿ ಇರುವಾಗಲೇ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದೆ ಎಂಎಲ್ಎ ಸ್ಪರ್ಧೆಯಿಂದ ಹಿಂದೆ ಸರಿದು, ತನ್ನ ಮಗ ಸಿದ್ಧಾರ್ಥ ಸಿಂಗ್ ಅವರನ್ನು ಕಣಕ್ಕಿಳಿಸಿದ್ದರು. ಆದರೆ, ಗೆಲುವು ದಾಖಲಾಗಲಿಲ್ಲ. ಈ ಬೆಳವಣಿಗೆಯಿಂದಾಗಿ ಸಿಂಗ್ ಹಂತಹಂತವಾಗಿ ರಾಜಕಾರಣದಿಂದ ದೂರ ಸರಿಯುತ್ತಿದ್ದಾರೆನ್ನುವ ಮಾತುಗಳು ಹರಿದಾಡುತ್ತಿವೆ.
ಇದನ್ನೂ ಓದಿ: ವಿಜಯನಗರದಲ್ಲಿ ಬಿಜೆಪಿ ಗೆಲುವು ಖಚಿತ,ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿಕೆ
ಬಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಐದು ವರ್ಷಗಳ ಅಧಿಕಾರ ಅವಧಿ ಅಕ್ಟೋಬರ್ಗೆ ಮುಕ್ತಾಯವಾಗಲಿದೆ. ಮುಂದಿನ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದೆ. ಎರಡೂವರೆ ವರ್ಷದಿಂದ ಅಧ್ಯಕ್ಷ ಸ್ಥಾನದಲ್ಲಿರುವ ಸಿಂಗ್ ಈಗ ದಿಢೀರ್ ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ.
ರಾಜೀನಾಮೆ ನೀಡಿದ್ದಾರೆನ್ನಲಾದ ಪತ್ರ ಶನಿವಾರ ಹೊರ ಬಿದ್ದಿದೆ. ವೈಯಕ್ತಿಕ ಕಾರಣದಿಂದ ಜು.1ರಿಂದ ಅನ್ವಯವಾಗುವಂತೆ ರಾಜೀನಾಮೆ ನೀಡುತ್ತಿರುವುದಾಗಿ ಜೂ.27 ರಂದು ಬರೆದಿದ್ದಾರೆ. ಆದರೆ, ಅಧಿಕೃತವಾಗಿ ಪತ್ರ ಬ್ಯಾಂಕ್ಗೆ ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕುರಿತ ಮಾಹಿತಿ ಪಡೆಯಲು ಬ್ಯಾಂಕ್ ಸಿಇಒ ಹರೀಶ ಹಾಗೂ ಪ್ರಭಾರ ಶಂಕರ್ ಅವರ ಮೊಬೈಲ್ಗೆ ಸಂಪರ್ಕಿಸಲು ಪ್ರಯತ್ನಿಸಿದರೂ ಸ್ವಿಚ್ ಆಫ್ ಆಗಿದ್ದವು.