ಶಿಕಾರಿಪುರ: ಶಾಲೆಗಳಲ್ಲಿ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಯಶವಂತ ಕುಮಾರ್ ಹೇಳಿದರು.
ತಾಪಂ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಕ್ಸೋ ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.
ನ್ಯಾಯಾಂಗ ಇಲಾಖೆ ಮಕ್ಕಳ ಹಕ್ಕುಗಳ ರಕ್ಷಣೆ, ಅವುಗಳ ಪಾಲನೆಯನ್ನು ಎಚ್ಚರಿಕೆಯಿಂದ ಗಮನಿಸುತ್ತಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯಗಳು ಜಾಸ್ತಿ ಆಗುತ್ತಿವೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಸರಿಯಾದ ಕ್ರಮಕೈಗೊಳ್ಳಬೇಕು ಎಂದರು.
ಡಿವೈಎಸ್ಪಿ ಶಿವಾನಂದ ಮದರಕಂಡಿ, ಸರ್ಕಲ್ ಇನ್ಸ್ಪೆಕ್ಟರ್ ರುದ್ರೇಶ್ ಕಾನೂನಿನ ಮಹತ್ವ ಹಾಗೂ ಮುಖ್ಯಶಿಕ್ಷಕರ ಪಾತ್ರದ ಕುರಿತು ವಿವರಿಸಿದರು. ಬಿಇಒ ಜಿ.ಎಸ್.ಶಶಿಧರ್ ಆರ್ಟಿಇ, ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಠಾಣಾಧಿಕಾರಿ ಪ್ರಶಾಂತ್, ಸಮನ್ವಯ ಅಧಿಕಾರಿ ನಾಗರಾಜ್ ಇದ್ದರು.