ಪಾಂಡವಪುರ : ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಸಮೀಪ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಅಡುಗೆ ಮಾಡಲು ನಿರ್ಮಿಸಿದ್ದ ಒಲೆಗೆ ಅಡುಗೆ ನಂತರ ನೀರು ಸುರಿದಿದ್ದರಿಂದ ಉಂಟಾದ ಹೊಗೆಯಿಂದ ಬೇವಿನಮರದಲ್ಲಿ ಕಟ್ಟಿದ್ದ ಜೇನು ದಾಳಿ ನಡೆಸಿದೆ ಎನ್ನಲಾಗಿದೆ. ಸುಮಾರು 50ಕ್ಕೂ ಅಧಿಕ ಜನರ ಮೇಲೆ ಹೆಜ್ಜೇನು ಏಕಾ ಏಕಿ ದಾಳಿ ನಡೆಸಿದ್ದು, ದಾಳಿಯಿಂದ ಗಾಯಗೊಂಡವರು ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಪೈಕಿ ನಾಗೇಗೌಡ ಎಂಬುವವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಿ.ಎ.ಅರವಿಂದ ಮಾತನಾಡಿ, ಹೆಜ್ಜೇನು ದಾಳಿಗೊಳಗಾದವರಲ್ಲಿ 20 ಜನರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಈ ಪೈಕಿ ನಾಗೇಗೌಡ ಅವರ ಹೃದಯ ಬಡಿತದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಮೈಸೂರಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.