ಬಳ್ಳಾರಿ: ತಾಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಮಧ್ಯಾಹ್ನ ಉಪಹಾರ ಯೋಜನೆ)ಶಾಲಾ ಹಂತದ ಸಾಮಾಜಿಕ ಪರಿಶೋಧನೆ ಕಾರ್ಯಕ್ರಮವನ್ನು ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಶ್ರೀನಿವಾಸ್ ಉದ್ಘಾಟಿಸಿದರು.
ನಂತರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಹಾಗೂ ಆಕರ್ಷಣೆಗೊಳಿಸಲು ಕಾಲಕಾಲಕ್ಕೆ ಹಲವು ಯೋಜನೆ ಜಾರಿಗೆ ತರುತ್ತಿದೆ. ಅದರಲ್ಲಿ ಉಪಹಾರ ಯೋಜನೆ ಮಹತ್ವಾಕಾಂಕ್ಷಿ ಯೋಜನೆ, ಅದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದರು.
ಮುಖ್ಯ ಗುರು ರವಿಚೇಳ್ಳಗುರ್ಕಿ ಮಾತನಾಡಿ, ಶಾಲೆಗೆ ದಾಖಲಾದ ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸುವುದು ಹಾಗೂ ಮಕ್ಕಳ ಪೌಷ್ಟಿಕತೆ ಹೆಚ್ಚಿಸಿ ಕಲಿಕೆಯಲ್ಲಿ ಸಮರ್ಥರನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ ಎಂದರು.