ಬಳ್ಳಾರಿ: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಸರ್ಕಾರ ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಎಐಡಿಎಸ್ಒ ಒತ್ತಾಯಿಸಿದೆ.
ಮಹಾನ್ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಸ್ಮರಣ ದಿನದ ಅಂಗವಾಗಿ ಸಾರ್ವಜನಿಕ ಶಿಕ್ಷಣ ಉಳಿಸಿ ದಿನದ ಭಾಗವಾಗಿ ನಗರದ ಗಾಂಧಿಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.
ಸಂಘಟನೆ ಜಿಲ್ಲಾಧ್ಯಕ್ಷ ರವಿಕಿರಣ್.ಜೆ.ಪಿ ಮಾತನಾಡಿ, ಸರ್ಕಾರದ ನೀತಿಗಳು ಶಿಕ್ಷಣವನ್ನು ಮತ್ತಷ್ಟು ದುಬಾರಿಗೊಳಿಸುತ್ತಿವೆ. ಶಿಕ್ಷಣ ಕ್ಷೇತ್ರ ಖಾಸಗೀಕರಣದತ್ತ ದಾಪುಗಾಲು ಇಡುತ್ತಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಉಳಿಯಬೇಕು. ಆ ಶಾಲೆಗಳಿಗೆ ಉತ್ತಮ ಮೂಲಸೌಕರ್ಯ, ಅಗತ್ಯ ಸಂಖ್ಯೆಯ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಜನರಿಗಾಗಿ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಮುಚ್ಚುವ ಹಕ್ಕು ಸರ್ಕಾರಕ್ಕೆ ಇಲ್ಲ. ನಮ್ಮ ಶಾಲೆ ನಮ್ಮ ಹಕ್ಕು ಆಗಿದ್ದು, ಸರ್ಕಾರಿ ಶಾಲೆಗಳನ್ನು ಸರ್ಕಾರ ಉಳಿಸಲೇಬೇಕು. ವಿಲೀನದ ಹೆಸರಿನಲ್ಲಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಬೇಕು. ಆರ್ಥಿಕ ಸ್ವಾಯತ್ತತೆಯ ಹೆಸರಿನಲ್ಲಿ ವಿದ್ಯಾರ್ಥಿಗಳ ಶುಲ್ಕವನ್ನು ಕಾಲೇಜು ಅಭಿವೃದ್ಧಿಗೆ ಬಳಸುವುದನ್ನು ನಿಲ್ಲಿಸಬೇಕು. ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲು ಬೇಕಾದ ಹಣ ಮಂಜೂರು ಮಾಡಬೇಕು. ಜಿಲ್ಲೆಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಲ್ಪಿಸಬೇಕು ಎಂದು ಆಗ್ರಹಿಸಿದರು.