ಬಳ್ಳಾರಿ: ಸರ್ಕಾರ, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಜು.10ರಂದು ಆರೋಗ್ಯ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿದರು.
ಮಾಸಿಕ 12 ಸಾವಿರ ರೂ.ಗೌರವಧನ ನೀಡಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯ ರಕ್ಷಣಾ ಸಾಮಗ್ರಿ ನೀಡಬೇಕು ಎಂದು ಒತ್ತಾಯಿಸಿ ಹಲವು ದಿನಗಳಿಂದ ಮನವಿ ಸಲ್ಲಿಸುತ್ತಾ ಬಂದಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಜು.10ರಂದು ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಲಿದ್ದೇವೆ.
ಪ್ರಮುಖವಾಗಿ ಜಿಲ್ಲೆ, ತಾಲೂಕು, ಪಿಎಚ್ಸಿ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸಿ ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ ವೇಳೆ ಬೇಡಿಕೆಗಳು ಇರುವ ಪ್ರಣಾಳಿಕೆ ಪತ್ರ ಬಿಡುಗಡೆಗೊಳಿಸಲಾಯಿತು. ಸಂಘದ ಜಿಲ್ಲಾ ಗೌರವಾಧ್ಯಕ್ಷೆ ಎ.ಶಾಂತಾ, ನಗರ ಅಧ್ಯಕ್ಷೆ ರಾಮಕ್ಕ, ನಗರ ಕಾರ್ಯದರ್ಶಿ ರೇಷ್ಮಾ ಇದ್ದರು.