ಬಳ್ಳಾರಿ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆ.17 ರಂದು ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣ ಸಮಾರಂಭ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಸೂಚನೆ ನೀಡಿದ್ದಾರೆ.
ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಬಸವಣ್ಣ ಅವರನ್ನು ರಾಜ್ಯ ಸರ್ಕಾರವು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.13 ರಂದು ಭಾವಚಿತ್ರ ಅನಾವರಣಗೊಳಿಸಿದ್ದಾರೆ. ಅದರಂತೆ ಫೆ.17 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಸರ್ಕಾರವು ನಿರ್ದೇಶಿಸಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಅನಾವರಣಗೊಳಿಸುವ ಕಾರ್ಯಕ್ರಮ ಆಯೋಜಿಸಿ, ಕಡ್ಡಾಯವಾಗಿ ಅಳವಡಿಸಬೇಕು. ಭಾವಚಿತ್ರದ ಕೆಳಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಿ ಅಳವಡಿಸಬೇಕು. ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಥವಾ ಜಾಲತಾಣ https://kannadasiri.Karnataka.Gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.