ಬೆಂಗಳೂರು: ಬಾಂಬ್ ಬೆದರಿಕೆ ಹಿನ್ನೆಲೆ ಇಂದು ನಗರದ ಅನೇಕ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ನಾಳೆ ಶಾಲೆಗಳು ಇರುತ್ತದೆಯೋ ಇಲ್ಲವೋ ಎಂಬ ಗೊಂದಲ ಪೋಷಕರಿಗಿತ್ತು. ಆದರೆ ಎಂದಿನಂತೆ ಬೆಂಗಳೂರಿನ ಶಾಲಾ-ಕಾಲೇಜು ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ದಯಾನಂದ್ ತಿಳಿಸಿದ್ದಾರೆ.
ಎಂದಿನಂತೆ ನಾಳೆ ಶಾಲೆ ಸಹಜವಾಗಿ ನಡೆಯುತ್ತದೆ. ಯಾವುದೇ ರಜೆ ಇರುವುದಿಲ್ಲ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹೀಗಾಗಿ ನಾಳೆ ಸಹಜ ಶಾಲೆಗಳು ಇರುತ್ತದೆ ಎಂದು ಹೇಳಿದ್ದಾರೆ.
ಸುಮಾರು 60ಕ್ಕೂ ಹೆಚ್ಚು ಶಾಲೆಗಳಿಗೆ ಮೇಲ್ ಬಂದಿವೆ. ಆತಂಕಪಡುವ ಅಗತ್ಯವಿಲ್ಲ. ನಾವು ಶಾಲೆಗೆ ರಜೆ ನೀಡಿಲ್ಲ. ಒಂದು ವೇಳೆ ಅನಿವಾರ್ಯತೆ ಇದ್ದರೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡುತ್ತದೆ. ದುರದ್ದೇಶದಿಂದ ಮೇಲ್ ಬಂದಿರಬಹುದು. ಸರ್ಕಾರ ಈ ಬಗ್ಗೆ ತನಿಖೆಗೆ ಮುಂದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಘಟನೆಯನ್ನು ಲಘುವಾಗಿ ಪರಿಗಣಿಸದಿರಿ: ಎಚ್ಡಿಕೆ
ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಕುಮಾರಸ್ವಾಮಿ ಹೇಳಿದರು.
ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು.
ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ಎಚ್ಡಿಕೆ ತಿಳಿಸಿದರು.
ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ