More

    ಬೆಂಗಳೂರು ಕಂಬಳಕ್ಕೆ 8 ಲಕ್ಷ ಮಂದಿ ಸೇರುವ ನಿರೀಕ್ಷೆ




    ಮಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನ. 25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ
    ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಒಂದು ಹಂತದ ಕಂಬಳ ಕರೆಗಳ ನಿರ್ಮಾಣ ಕಾರ್ಯ ನಡೆದಿದೆ. ಕಂಬಳದ ಎರಡು ದಿನಗಳ ಅವಧಿಯಲ್ಲಿ ಸುಮಾರು 8 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಶಾಸಕ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
    ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಗೌರವ ಅತಿಥಿಯಾಗಿ ಭಾಗವಹಿಸಿ ಬೆಂಗಳೂರು ಕಂಬಳದ ಬಗ್ಗೆ ಮಾಹಿತಿ ನೀಡಿದ ಅವರು ‘ ಕರಾವಳಿ ಜಿಲ್ಲೆಯ ಸಂಸ್ಕೃತಿಯನ್ನು ರಾಜ್ಯ ಹಾಗೂ ರಾಷ್ಟ್ರದ ಜನತೆಗೆ ಪರಿಚಯಿಸುವ ಜತೆಗೆ ಕಂಬಳದ ಇತಿಹಾಸದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುವ ಉದ್ದೇಶ ಹೊಂದಲಾಗಿದೆ ಎಂದರು.
    155 ಮೀ.ಉದ್ದ ಕಂಬಳದ ಕರೆ ನಿರ್ಮಾಣ ಮಾಡಲಾಗಿದೆ. ವಿವಿಧ ವಿಭಾಗಗಳಲ್ಲಿ ಜಯಗಳಿಸುವ ಕಂಬಳದ ಕೋಣಗಳಿಗೆ, ಓಡಿಸುವವರಿಗೆ ಬಹುಮಾನ ಮೊತ್ತ, ಭಾಗವಹಿಸುವ ಪ್ರತಿ ಕೋಣಗಳ ಯಜಮಾನರಿಗೆ ಗೌರವ ಧನ ನೀಡಲಾಗುವುದು.
    116 ಜೋಡಿ ಕೋಣಗಳ ನೋಂದಣಿಯಾಗಿದ್ದು, ಇನ್ನು ಕೆಲವು ಕೋಣಗಳ ಯಜಮಾನರು ಭಾಗವಹಿಸಲು ಆಸಕ್ತಿ ವಹಿಸಿದ್ದಾರೆ
    ಕಂಬಳ ವೀಕ್ಷಣೆಗೆ ಐಎಎಸ್, ಐಪಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಕುಟುಂಬ ಸಹಿತವಾಗಿ ಭಾಗವಹಿಸಲು ಅವಕಾಶ ಕೋರಿದ್ದಾರೆ.ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅಶೋಕ್ ರೈ ವಿವರ ನೀಡಿದರು.
    * ತಾರಾ ಮೆರಗು
    ಸಿನಿಮಾ ತಾರೆಯರಾದ ಐಶ್ವರ್ಯ ರೈ , ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ, ಸುನಿಲ್ ಶೆಟ್ಟಿ, ಯಶ್, ದರ್ಶನ್ , ಕ್ರಿಕೆಟ್ ತಾರೆ ಕೆ.ಎಲ್. ರಾಹುಲ್ ಸಹಿತ ಹಲವು ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ನಟ ರಜನೀಕಾಂತ್ ಕೂಡಾ ಭಾಗವಹಿಸಲು ಆಸಕ್ತಿ ವಹಿಸಿದ್ದಾರೆ.ಕಂಬಳದ ಜತೆಗೆ ತುಳುನಾಡಿನ ಸಾಂಪ್ರದಾಯಿಕ ಅಡುಗೆ, ತಿಂಡಿತಿನಿಸುಗಳು ಸೇರಿದಂತೆ ಇಲ್ಲಿನ ವೈಶಿಷ್ಟೃಕ್ಕೆ ಸಂಬಂಧಿಸಿದ 250 ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
    *ಕೋಣಗಳಿಗೆ ಜಿಲ್ಲೆಯ ನೀರು
    ಕಂಬಳದಲ್ಲಿ ಭಾಗವಹಿಸುವ ಕೋಣಗಳ ಆರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರ ವಹಿಸಲಾಗುವುದು. ಕೋಣಗಳಿಗೆ ದ.ಕ. ಜಿಲ್ಲೆಯಿಂದಲೇ ಟ್ಯಾಂಕರ್‌ಗಳ ಮೂಲಕ ಕುಡಿಯಲು ನೀರು ಪೂರೈಕೆಗೂ ವ್ಯವಸ್ಥೆ ಮಾಡಲಾಗುತ್ತಿದೆ. ಕೋಣಗಳಿಗೆ ಉಪ್ಪಿನಂಗಡಿಯಲ್ಲಿ ಏಕಕಾಲಕ್ಕೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗುತ್ತದೆ. ಅಲ್ಲಿಂದ ಹೊರಟ ಕೋಣಗಳು ಹಾಸನದಲ್ಲಿ ಸುಮಾರು 4 ಗಂಟೆಗಳ ಕಾಲ ವಿಶ್ರಾಂತಿ ಪಡೆಯಲಿವೆ. ದಾರಿಯುದ್ದಕ್ಕೂ ಸ್ಥಳೀಯ ಹಾಗೂ ತುಳು ಸಂಘಟನೆಗಳಿಂದ ಕೋಣಗಳನ್ನು ಸ್ವಾಗತಿಸುವ ಕಾರ್ಯಕ್ರಮವೂ ಇದೆ ಎಂದು ಅಶೋಕ್‌ಕುಮಾರ್ ರೈ ವಿವರ ನೀಡಿದರು.
    ದಾಯ್ಜಿವರ್ಲ್ಜ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್‌ನ ರಾಮಕೃಷ್ಣ ಆರ್., ಕಾರ್ಯಕ್ರಮ ಸಂಯೋಜಕ ವಿಜಯ ಕೋಟ್ಯಾನ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಹರೀಶ್ ಮೋಟುಕಾನ ಕಾರ್ಯಕ್ರಮ ನಿರೂಪಿಸಿದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts