ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ದುಪ್ಪಟ್ಟು ಆಗಿದೀಯೇ. ಚಿಂತೆ ಬಿಡಿ ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದ್ದು, ಯಾವ ರೀತಿ ದಂಡ ಪರಿಶೀಲಿಸಬಹುದು ಮತ್ತು ಪಾವತಿ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದೆ.
ಬಾಕಿ ಇರುವ ದಂಡದ ವಿವರಗಳನ್ನು ವೀಕ್ಷಿಸುವ ಮತ್ತು ಪಾವತಿಸುವ ವಿಧಾನ ಈ ಕೆಳಕಂಡಂತಿದೆ….
1. ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ
2. ಪೇ ಟಿಎಂ ಆಪ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ
3. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಬಹುದಾಗಿರುತ್ತದೆ. ದಂಡವನ್ನು ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ
4. ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಪಾವತಿಸಬಹುದಾಗಿದೆ.
ಪೇ ಟಿಎಂನಲ್ಲಿ ಪಾವತಿಸುವುದು ಹೇಗೆ?
ಪೇ ಟಿಎಂ ಆ್ಯಪ್ ಓಪನ್ ಮಾಡಿ. ಬಳಿಕ ರೀಚಾರ್ಜ್ ಮತ್ತು ಬಿಲ್ ಪೇಮೆಂಟ್ ವಿಧಾನವನ್ನು ಆಯ್ಕೆ ಮಾಡಿಕೊಳ್ಳಿ. ಚಲನ್ ಎಂಬ ಆಯ್ಕೆ ಕಾಣದಿದ್ದರೆ ವೀವ್ಸ್ ಮೋರ್ ಮೇಲೆ ಕ್ಲಿಕ್ ಮಾಡಿ. ನಂತರ ಟ್ರಾನ್ಸಿಟ್ ವಿಧಾನ ಆಯ್ಕೆ ಮಾಡಿಕೊಂಡು ಟ್ರಾಫಿಕ್ ಸಂಕೇತ ಇರುವ ಚಲನ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದಾದ ಬಳಿಕ ಬೆಂಗಳೂರು ಟ್ರಾಫಿಕ್ ಪೊಲೀಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ನಿಮ್ಮ ವಾಹನ ಸಂಖ್ಯೆಯನ್ನು ನಮೂದಿಸಿದರೆ ರಿಯಾಯಿತಿಯೊಂದಿಗೆ ನಿಮ್ಮ ದಂಡದ ಮೊತ್ತ ಕಾಣುತ್ತದೆ. ನಂತರ ದಂಡವನ್ನು ಪಾವತಿಸಿ.
ವಿನಾಯಿತಿ ನೀಡಿದ್ದೇಕೆ?
ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಎಲ್ಲರಿಗೂ ನ್ಯಾಯ ಒದಗಿಸುವ ಸಲುವಾಗಿ ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಫೆ. 11ರ ಒಳಗೆ ಮಾತ್ರ ವಿನಾಯಿತಿ
ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ. ನಿಗದಿತ ದಿನಾಂಕದಂದು ಬಾಕಿ ಪ್ರಕರಣಗಳನ್ನು ಇತ್ಯಾರ್ಥ ಮಾಡಿಕೊಳ್ಳುವರಿಗೆ ಮಾತ್ರ ಇದು ಅನ್ವಯ ಆಗಲಿದೆ. ಆನಂತರ ಬಂದವರಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಹಲವು ವರ್ಷಗಳಿಂದ ಅಂದಾಜು 2 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರ ಕೊಟ್ಟಿರುವ ಅವಕಾಶವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಆನ್ಲೈನ್ ಅಥವಾ ಸಂಚಾರ ಪೊಲೀಸ್ ಠಾಣೆಯಲ್ಲಿ ದಂಡದ ಮೊತ್ತವನ್ನು ಪಾವತಿಸಿ ವಿನಾಯಿತಿ ಪಡೆಯವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಆದಿಲ್ಗೆ ಅಕ್ರಮ ಸಂಬಂಧವಿದೆ: ಮದ್ವೆಯಾದ ಕೆಲವೇ ದಿನಗಳಲ್ಲಿ ಪತಿ ವಿರುದ್ಧ ರಾಖಿ ಸಾವಂತ್ ಗಂಭೀರ ಆರೋಪ