ಮಡಿಕೇರಿ : ಶನಿವಾರಸಂತೆಯ ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಪ್ರಸಕ್ತ ಸಾಲಿನ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾ.ಪಂ.ಅಧ್ಯಕ್ಷೆ ಕಮಲಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಹಾಸನ ಜಿಲ್ಲೆಗೆ ಸೇರಿದ ಮೀಸಲು ಅರಣ್ಯದಿಂದ ಕೊಡಗು ಜಿಲ್ಲೆಗೆ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಮೂಲಕ ಕಾಡಾನೆಗಳು ಕೊಡ್ಲಿಪೇಟೆ ಹೋಬಳಿಯ ಜಮೀನುಗಳಿಗೆ ಪ್ರವೇಶಿಸುತ್ತಿವೆ. ಬೆಸೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಾಡಾನೆ ಕಾರಿಡಾರ್ ನಿರ್ಮಾಣವಾಗಿರುವುದರಿಂದ ಕಾಡಾನೆಗಳು ರೈತರ ತೋಟ, ಹೊಲ ಗದ್ದೆಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಅರಣ್ಯಾಧಿಕಾರಿಗಳು ವಿಶೇಷ ಯೋಜನೆ ರೂಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಕಂದಾಯ ಇಲಾಖೆ ಕಟ್ಟೆಪುರ ಗ್ರಾಮದಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರಿಗೆ ಕಾಯ್ದಿರಿಸಿರುವ ಸ್ಮಶಾನ ಜಾಗವು ಕಲ್ಲುಬಂಡೆಗಳಿಂದ ಕೂಡಿದೆ. ಈ ಜಾಗದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗುತ್ತಿಲ್ಲ. ಇದರ ಬದಲಿಗೆ ಸ್ಮಶಾನಕ್ಕಾಗಿ ಸೂಕ್ತ ಜಾಗವನ್ನು ಮಂಜೂರು ಮಾಡಿಬೇಕು ಎಂದು ಗ್ರಾಮಸ್ಥರ ಪರವಾಗಿ ಪವಿತ್ರಾ ವಿಷಯ ಪ್ರಸ್ತಾಪಿಸಿದರು.
ನ್ಯಾಯದಳ್ಳ ಸರ್ಕಾರಿ ಶಾಲೆಯ ಸಮೀಪ ನಿರ್ಮಾಣವಾಗಿರುವ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ನೀರು ಸೋರಿಕೆಯಾಗುತ್ತಿದೆ. ಅನಾವಶ್ಯಕ ನೀರು ಪೋಲಾಗುತ್ತಿದ್ದು, ಇದನ್ನು ತಡೆಗಟ್ಟುವಂತೆ ಗ್ರಾಮಸ್ಥ ಸುಂದರಮೂರ್ತಿ ಗ್ರಾಮಸಭೆಯಲ್ಲಿ ಹೇಳಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಗ್ರಾಮಸ್ಥರು ಮತ್ತು ಗ್ರಾ.ಪಂ.ಸದಸ್ಯರ ನಡುವೆ ಸುದೀರ್ಘ ಚರ್ಚೆ ನಡೆಯಿತು.
ಗ್ರಾ.ಪಂ. ಸಭೆಗೆ ಹಾಜರಾಗಿದ್ದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಹಾಗೂ ಕೈಗೊಂಡಿರುವ ಕಾರ್ಯಗಳ ಬಗ್ಗೆ ಗ್ರಾ.ಪಂ. ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಹರೀಶ್, ಎಲ್ಲ ಸದಸ್ಯರು, ಪಿಡಿಒ ಗಿರೀಶ್, ಗ್ರಾ.ಪಂ. ಕಚೇರಿ ಸಿಬ್ಬಂದಿ ಹಾಜರಿದ್ದರು.