ಹೊಸದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವುದೇ ಕಾಂಗ್ರೆಸ್ ಸರ್ಕಾರದ ಬದ್ಧತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ತಾಲೂಕು ಕುರುಬರ ಸಂಘ ಹಾಗೂ ಕನಕ ನೌಕರರ ಸಾಂಸ್ಕೃತಿಕ ವೇದಿಕೆ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ
ಹಮ್ಮಿಕೊಂಡಿದ್ದ ಕನಕ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ
ಅವಧಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನನೆಗುದಿಗೆ ಬಿದ್ದ ಕಾರಣ ಕಾಮಗಾರಿಗೆ ಹಿನ್ನಡೆಯಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯ ಕುರಿತು ವಿಶೇಷವಾದ ಕಾಳಜಿ ಹೊಂದಿರುವ ಶಾಸಕ ಬಿ.ಜಿ.ಗೋವಿಂದಪ್ಪ ಯೋಜನೆಯ ಅನುಷ್ಠಾನಕ್ಕೆ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ.
ಕಾಮಗಾರಿ ನಿರ್ವಹಣೆಗೆ ಅಡ್ಡಿಯಾಗಿರುವ ಸಮಸ್ಯೆ ನಿವಾರಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರ ಜಿಲ್ಲೆಗೆ ನೀಡಿದ ಯೋಜನೆಗಳು ಅನುಷ್ಠಾನವಾಗದೆ ಉಳಿದಿವೆ.
ಅಂತಹ ಕಾಮಗಾರಿ ಹಾಗೂ ಯೋಜನೆಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಶಾಸಕ ಬಿ.ಜಿ.ಗೋವಿಂದಪ್ಪ ಮಾರ್ಗದರ್ಶನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ ಎಂದರು.
ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, 1999ರಲ್ಲಿ ವಿಧಾನಸಭೆ ಪ್ರವೇಶಿಸಿದ ನಾನು ನಂತರ ಎಲ್ಲ ಸಮುದಾಯದ ಜನರ ಪ್ರೀತಿ ವಿಶ್ವಾಸಗಳಿಸುವ ಮೂಲಕ ತಾಲೂಕಿನಲ್ಲಿ ನಾಯಕತ್ವ ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.
ಹಣವಿಲ್ಲದೆ ರಾಜಕಾರಣ ಮಾಡಲು ಸಾಧ್ಯವಿಲ್ಲ. ಆದರೆ, ನನ್ನ ಹಣಕಾಸಿನ ವ್ಯವಸ್ಥೆ ಕುರಿತು ಸಂಶಯಪಡುವ ಅಗತ್ಯವಿಲ್ಲ.
ರಾಜ್ಯದಲ್ಲಿ ಇರುವ ನನ್ನ ಬೆಂಬಲಿಗರು ಹಾಗೂ ಹಿತೈಷಿಗಳು ಚುನಾವಣೆಯಲ್ಲಿ ನನಗೆ ಹಣ ನೀಡಿ ಆಶೀರ್ವದಿಸಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಸಮಾಜಕ್ಕೆ ಕಳಂಕ ತರುವ ಯಾವುದೇ ಕೆಲಸ ಮಾಡಿಲ್ಲ ಎಂದರು.
ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಸಮುದಾಯಗಳ ಅಧ್ಯಕ್ಷರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು.
ಕನಕದಾಸರು ರಚಿಸಿರುವ ರಾಮಧ್ಯಾನ ಚರಿತ್ರೆಯ ಗದ್ಯ ಅನುವಾದ ಹಾಗೂ ವಿಷ್ಣು ಪುರಾಣದ ತ್ರಿಪದಿ ಕಾವ್ಯದ ಕೃತಿಯನ್ನು ಕನಕ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಬಿಡುಗಡೆಗೊಳಿಸಿದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಂಜುನಾಥ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಟಿ.ರಘುಮೂರ್ತಿ, ಶ್ರೀನಿವಾಸ್,
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕನಕ ನೌಕರರ ಸಂಘದ ಅಧ್ಯಕ್ಷ ಶಾಂತಕುಮಾರ್, ಎಂ.ಎಚ್.ಕೃಷ್ಣಮೂರ್ತಿ, ಶ್ರೀಧರಮೂರ್ತಿ ಇತರರಿದ್ದರು.
ಎಲ್ಲ ಸಮುದಾಯಗಳ ಜನರ ವಿಶ್ವಾಸಗಳಿಸುವ ಮೂಲಕ ಶಾಸಕ ಬಿ.ಜಿ.ಗೋವಿಂದಪ್ಪ ತಾಲೂಕಿನಲ್ಲಿ ಸಮರ್ಥವಾದ ನಾಯಕತ್ವ ರೂಪಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಂಡಿದೆ. ಆದರೆ, ಬೇರೆ ಪಕ್ಷಗಳು ಮತಕ್ಕೆ ಹಣ ನಿಗದಿಪಡಿಸುವ ಮೂಲಕ ಮತದಾರ ಹಾಗೂ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸುವಂತಹ ಕೀಳುಮಟ್ಟದ ರಾಜಕಾರಣ ಮಾಡುತ್ತಿವೆ.
ಎಚ್.ಆಂಜನೇಯ ಮಾಜಿ ಸಚಿವ