ಗುವಾಹಟಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಅಸ್ಸಾಂ ರಾಜಧಾನಿ ಗುವಾಹಟಿ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಈ ಸಂಬಂಧ ಪೊಲೀಸರು ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರು ಹಾಗೂ ಪೊಲೀಸರ ನಡುವಿನ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾಸ್ ಶರ್ಮಾ ಡಿಜಿಪಿಗೆ ಸೂಚಿಸಿದ್ದಾರೆ. ಯಾತ್ರೆಯಲ್ಲಿ ಪಾಲ್ಗೊಂಡಿರುವವರು ಯಾರು ಅಸ್ಸಾಂನವರಲ್ಲ ಕೂಡಲೇ ರಾಹುಲ್ ಗಾಂಧಿ ಹಾಗೂ ಅವರ ಸಹಚರರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ‘ಜೈ ಶ್ರೀರಾಮ್’ ಘೋಷಣೆ ಕೇಳುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ರಾಹುಲ್ ಗಾಂಧಿ; ವಿಡಿಯೋ ವೈರಲ್
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಪ್ರತಿಕ್ರಿಯಿಸಿರುವ ಎಐಸಿಸಿ, ಭಾರತ್ ಜೋಡೊ ನ್ಯಾಯ ಯಾತ್ರೆಯ ಪಡೆಯುತ್ತಿರುವ ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಹಾಗೂ ಅಸ್ಸಾಂ ಸರ್ಕಾರ ಇಂತಹ ಹೇಡಿತನದ ಮತ್ತು ನಾಚಿಕೆಗೇಡಿನ ಕೃತ್ಯ ನಡೆಸಿದೆ. ದು ಜನರ ಧ್ವನಿ ಎಂಬುದನ್ನು ಬಿಜೆಪಿ ಮರೆಯಬಾರದು. ಯಾವುದೇ ಬೆಲೆ ತೆತ್ತರೂ ಅದನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದೆ.
ನಮ್ಮ ಹಾದಿಯಲ್ಲಿರುವ ಈ ಮುಳ್ಳುಗಳು ನಮ್ಮ ಧೈರ್ಯವನ್ನು ಹೆಚ್ಚಿಸುತ್ತಿವೆ ಮತ್ತು ನಮ್ಮನ್ನು ಬಲಪಡಿಸುತ್ತಿವೆ. ನಾವು ಯಾರಿಗೂ ಹೆದರುವುದಿಲ್ಲ. ಭಾರತ್ ಜೋಡೋ ನ್ಯಾಯ್ ಯಾತ್ರೆ ಮುಂದುವರೆಯಲಿದೆ. ಈ ಹಿಂದೆ ಭಜರಂಗದಳ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಯಾತ್ರೆ ನಡೆಸಲಾಗಿತ್ತು. ಆದರೆ ಅವರನ್ನು ತಡೆಯಲಿಲ್ಲ. ನಮ್ಮನ್ನು ತಡೆಯಲಾಗಿದೆ. ಬಿಜೆಪಿಯವರು ನಿಮ್ಮನ್ನು ಗುಲಾಮರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.