ನವದೆಹಲಿ: ಪೌರತ್ವ ತಿದ್ದುಪಡಿ ಜಾರಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸುಪ್ರೀಂ ಕೊರ್ಟ್ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಈಶಾನ್ಯ ದೆಹಲಿಯ ಜಾಫರಾಬಾದ್ ಮತ್ತು ಮೌಜ್ಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಪು ಘರ್ಷಣೆ ಉಂಟಾಗಿ ಪೊಲೀಸ್ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಘರ್ಷಣೆಗೆ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮಾಡಿದ ಭಾಷಣವೇ ಕಾರಣ ಹೀಗಾಗಿ ಸಲ್ಲಿಕೆಯಾಗಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಶಾನ್ಯ ದೆಹಲಿಯಲ್ಲಿ ಶನಿವಾರ ರಾತ್ರಿಯಿಂದ ಪ್ರತಿಭಟನೆಗಳು ನಡೆಯುತ್ತಿವೆ. ಮೂರು ದಿನದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಬೇಕು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇದ್ದಾರೆ. ಹೀಗಾಗಿ ನಾವು ಸುಮ್ಮನೆ ಇದ್ದೇವೆ. ಅವರು ತೆರಳಿದ ನಂತರ ಪ್ರತಿಭಟನೆ ಹೀಗೆ ಮುಂದುವರಿದರೇ ನಾವು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಕಪಿಲ್ ಮಿಶ್ರಾ ಅವರು ವಿಡಿಯೋದಲ್ಲಿ ಮಾತನಾಡಿರುವ ಹಿನ್ನೆಲೆಯಲ್ಲಿ ಘರ್ಷಣೆ ಅಧಿಕವಾಗಿದೆ ಎಂದು ಚಂದ್ರಶೇಖರ್ ಅಜಾದ್ ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವವರಿಗೆ ಭದ್ರತೆ ಒದಗಿಸಬೇಕು ಎಂದು ಕೂಡ ಅಜಾದ್ ಮನವಿ ಮಾಡಿದ್ದಾರೆ. (ಏಜೆನ್ಸೀಸ್)