ಚಿಕ್ಕಮಗಳೂರು: ದಲಿತ ಸಮಾಜವನ್ನು ಒಗ್ಗೂಡಿಸುವ ಉದ್ದೇಶದಿಂದ ಫೆ.7ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಭೀಮ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಗ್ರಾಮ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಹಂಪಯ್ಯ ತಿಳಿಸಿದರು.
ವಿಧಾನಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಸೇರಿ ಹಲವು ಗಣ್ಯರು ಹಾಗೂ ಪಕ್ಷದ ಮುಖಂಡರು ಸಮಾವೇಶದಲ್ಲಿ ಭಾಗವಹಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸ್ವಾತಂತ್ರೃಪೂರ್ವದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ನಡೆದು ಬಂದ ಹಾದಿ ಬಗ್ಗೆ ಸಮಾವೇಶದಲ್ಲಿ ಚಿಂತನ-ಮಂಥನ ನಡೆಸಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರೃ ನಂತರದಲ್ಲಿ ಆಡಳಿತಕ್ಕೆ ಬಂದ ಸರ್ಕಾರಗಳು ಡಾ. ಬಿ.ಆರ್.ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಏಳಿಗೆಗೆ ಸಂಬಂಧಿಸಿ ನಡೆದುಕೊಂಡ ರೀತಿ ಹಾಗೂ ದಲಿತ ಉದ್ಧಾರಕ್ಕೆ ಕೈಗೊಂಡಿರುವ ಯೋಜನೆಗಳ ಕುರಿತು ಚರ್ಚಿಸಲಾಗುವುದು. ಹಾಗಾಗಿ ದಲಿತ ಸಮಾಜದವರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಮುಖಂಡರಾದ ಜೆ.ಡಿ.ಲೋಕೇಶ್, ರೇವನಾಥ್, ಕೇಶವಮೂರ್ತಿ, ಯತೀಶ್, ಗುರುಸ್ವಾಮಿ ಸುದ್ದಿಗೋಷ್ಟಿಯಲ್ಲಿದ್ದರು.