ಚಿತ್ರದುರ್ಗ: ದೇಶದ ವಿವಿಧ ರಾಜ್ಯಗಳಲ್ಲಿರುವ ಭೋವಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದರು.
ಗುರುಪೀಠಕ್ಕೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸ್ವಾಮೀಜಿ ಮನವಿ ಮಾಡಿದರು. ಅಲ್ಲದೆ, ಸದಾಶಿವ ಆಯೋಗ ವರದಿ ಕುರಿತು ಚರ್ಚಿಸಿದರು.
ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಮರ್ಪಕವಾಗಿ ಸಿಕ್ಕಿಲ್ಲ. ಆದ್ದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ನಮ್ಮವರಿಗೆ ಟಿಕೆಟ್ ಹಂಚಿಕೆ ಮಾಡಬೇಕು. ಪ್ರಸ್ತುತ ಕಲ್ಲುಕ್ವಾರಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮೇಶ್ವರ ಹಾಗೂ ಭೋವಿ ಸಮುದಾಯದ ಅಧ್ಯಯನ ಹಾಗೂ ಸಂಶೋಧನೆ ಕೇಂದ್ರ ಸ್ಥಾಪಿಸಿ ಕುಲಪತಿಗಳನ್ನು ನೇಮಕ ಮಾಡಬೇಕು ಎಂದು ಸ್ವಾಮೀಜಿ ಚರ್ಚಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ಸಿಂಗ್, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಶಾಸಕರಾದ ಎಂ.ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಜಿ.ಎಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಯುವ ಮುಖಂಡ ಅನಿತ್ ಇತರರಿದ್ದರು.