ಮಸ್ಕಿ: ಪ್ರಪಂಚವೇ ಕರೊನಾ ವೈರಸ್ನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಲಿದೆ. ಆದ್ದರಿಂದ ಜನರು ದುಂದುವೆಚ್ಚ ಮಾಡದೇ ಜೀವನ ಸಾಗಿಸಬೇಕಾಗಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ಪಟ್ಟಣದ ಭ್ರಮಾರಂಬ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಕಷ್ಟದಲ್ಲಿರುವ ಬಡ ಕೂಲಿಕಾರ್ಮಿಕರಿಗೆ ಅನರ್ಹಗೊಂಡ ಶಾಸಕ ಪ್ರತಾಪಗೌಡ ಪಾಟೀಲ್ ನೀಡುತ್ತಿರುವ ದಿನಸಿ ಹಾಗೂ ತರಕಾರಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು.
ಆಲಿಕಲ್ಲು ಮಳೆಗೆ ಈ ಭಾಗದಲ್ಲಿ ಸುಮಾರು 3 ರಿಂದ 4 ಸಾವಿರ ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ಎಕರೆಗೆ 13,500 ರೂ. ಪರಿಹಾರ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಅನರ್ಹಗೊಂಡ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಕ್ಷೇತ್ರದ ಬಡವರಿಗೆ ವಯಕ್ತಿಕವಾಗಿ ಅಗತ್ಯ ದಿನಸಿ ವಸ್ತುಗಳನ್ನು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ತೆರಳಿ 6 ಸಾವಿರ ಕಿಟ್ಗಳನ್ನು ವಿತರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಾನಂದ ಯಾದವ್, ಜಿಲ್ಲಾ ಉಪಾಧ್ಯಕ್ಷ ಕೆ.ಅಪ್ಪಾಜಿಗೌಡ, ಮಸ್ಕಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಳ್ಳಿ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ತಿಮ್ಮನಗೌಡ ಗುಡದೂರು, ಮುಖಂಡರಾದ ಅಂದಾನಪ್ಪ ಗುಂಡಳ್ಳಿ, ಉಮಾಕಾಂತಪ್ಪ ಸಂಗನಾಳ ಹಾಗೂ ಪುರಸಭೆ ಸದಸ್ಯರು ಇದ್ದರು.