ಬೆಂಗಳೂರು: ಕರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರವು ಮೇ 10ರಿಂದ 24ರವರೆಗೂ ರಾಜ್ಯದ್ಯಂತ ಲಾಕ್ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ತಕ್ಷಣವೇ ನಿಲ್ಲಿಸುವಂತೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಜನಪ್ರಿಯ ರಿಯಾಲಿಟಿ ಕಾರ್ಯಕ್ರಮವಾದ ಬಿಗ್ ಬಾಸ್ನ ಎಂಟನೇ ಸೀಸನ್ ಸಹ ಸ್ಥಗಿತವಾಗುತ್ತಿದೆ.
ಇದನ್ನೂ ಓದಿ: ಕಂಗನಾಗೆ ಪಾಸಿಟಿವ್ … ಗೆದ್ದು ಬರುವ ವಿಶ್ವಾಸ ವ್ಯಕ್ತಪಡಿಸಿದ ನಟಿ
ಕಳೆದ 71 ದಿನಗಳಿಂದ ಬಿಗ್ ಬಾಸ್ನ ಎಂಟನೇ ಸೀಸನ್ ಪ್ರಸಾರವಾಗುತ್ತಿದ್ದು, ಸದ್ಯ 11 ಸ್ಪರ್ಧಿಗಳು ಮನೆಯಲ್ಲಿದ್ದಾರೆ. ಇದೀಗ ಲಾಕ್ಡೌನ್ ಘೋಷಣೆಯಾಗಿರುವುದರಿಂದ, ಸೋಮವಾರದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುತ್ತಿದೆ. ಭಾನುವಾರ ಪ್ರಸಾರವಾಗುವ ಕಂತು ಕೊನೆಯ ಕಂತಾಗಲಿದ್ದು, ಆ ನಂತರ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಫೇಸ್ಬುಕ್ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.
ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ.
ಇದನ್ನೂ ಓದಿ: ಇದು ನಮಿತಾ ಥಿಯೇಟರ್: ನೈಜ ಘಟನೆ ಆಧರಿತ ಕಥೆಗಳು ಇದರ ವಿಶೇಷತೆ
ಅಲ್ಲಿಗೆ, ಬಿಗ್ಬಾಸ್ನ ಎಂಟನೇ ಸೀಸನ್ ಕರೊನಾದಿಂದ ಸ್ಥಗಿತಗೊಳ್ಳುತ್ತಿದ್ದು, ಮುಂದೆ ಏನಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.