ಗುರುಗ್ರಾಮ: ಕಾರ್ ಪಾರ್ಕಿಂಗ್ ವಿಚಾರವಾಗಿ ಶುರುವಾದ ಗಲಾಟೆ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹರಿಯಾಣದ ಗುರುಗ್ರಾಮದ ಬಲಿವಾಸ್ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾನೂನು ಸುವ್ಯವಸ್ಥೆ ಕುರಿತು ಹಲವಾರು ಪ್ರಶ್ನೆಗಳು ಎದ್ದಿವೆ.
ಇದನ್ನೂ ಓದಿ: ಬಿಗ್ಬಾಸ್ ಮುಂದಿನ ಆವೃತ್ತಿಗೆ ಈಕೆ ಫಿಕ್ಸ್; ಈ ಸ್ಫರ್ಧಿಗಾಗಿ ಹೆಚ್ಚಾಯ್ತು ಡಿಮ್ಯಾಂಡ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬಲಿವಾಸ್ ಗ್ರಾಮದಲ್ಲಿರುವ ಫಾರ್ಮ್ ಹೌಸ್ನಲ್ಲಿ ಬರ್ತ್ಡೇ ಪಾರ್ಟಿ ಮಾಡಲು ಕೆಲವು ಯುವಕರು ಆಗಮಿಸಿದ್ದರು. ಈ ವೇಳೆ ಕಾರು ನಿಲ್ಲಿಸುವ ವಿಚಾರವಾಗಿ ಯುವಕರು ಹಾಗೂ ಗ್ರಾಮಸ್ಥರ ನಡುವೆ ಗಲಾಟೆಯಾಗಿದ್ದು, ರಾತ್ರಿ 11:30ರ ಸುಮಾರಿಗೆ ಪಾನಮತ್ತರಾಗಿದ್ದ ಉದ್ರಿಕ್ತ ಗುಂಪೊಂದು ಫಾರ್ಮ್ಹೌಸ್ಗೆ ನುಗ್ಗಿ ದಾಂಧಲೆ ಮಾಡಿದೆ. ಈ ವೇಳೆ ಅದನ್ನು ತಡೆಯಲು ಹೋದ ವಾಚ್ಮ್ಯಾನ್ ಪ್ರವೀಣ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರಯಲ್ಲಿ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಗಜೇಂದರ್ ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ಏಮ್ಸ್ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.