ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ, ಈ ಕುರಿತು ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸದೇ ಇರುವುದು ಬಹಿರಂಗವಾಗಿದ್ದು, ದಲಿತ ಸಮುದಾಯಗಳಿಗೆ ಬಿಜೆಪಿ ಮೋಸ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ದಲಿತ ಸಂಘಟನೆಗಳ ನಾಲ್ವರು ನಾಯಕರನ್ನು ಮಂಗಳವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಂಸತ್ತಿನ ಅಧಿವೇಶನದಲ್ಲಿ ಸಂಸದರು ಕೇಳಿದ ಪ್ರಶ್ನೆಗೆ ಕೇಂದ್ರ ಸಮಾಜ ಕಲ್ಯಾಣ ಸಚಿವ ಉತ್ತರಿಸಿದ್ದು, ಸಂವಿಧಾನದ ಷೆಡ್ಯೂಲ್ 9ಕ್ಕೆ ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ, ಒಟ್ಟಾರೆ ಮೀಸಲು ಪ್ರಮಾಣ ಶೇ.50 ರಿಂದ 56ಕ್ಕೆ ಏರಿಸಲು ಶಿಫಾರಸು ಮಾಡಿದ ಯಾವುದೇ ಪ್ರಸ್ತಾವನೆ ಕರ್ನಾಟಕ ಸರ್ಕಾರದಿಂದ ಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ದಲಿತರಿಗೆ ಮೋಸ ಮಾಡಿದ ಕಾರಣಕ್ಕೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ನಾಲ್ವರು ಸಚಿವರು, ಎಸ್ ಸಿ- ಎಸ್ ಟಿ ಸಮುದಾಯಕ್ಕೆ ಸೇರಿದ ಬಿಜೆಪಿ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮೀಸಲು ಪ್ರಮಾಣ ಹೆಚ್ಚಳದ ಪ್ರಸ್ತಾವನೆ ಕೇಂದ್ರಕ್ಕೆ ಕಳುಹಿಸಲು ಆಗ್ರಹಿಸಿ ಹೋರಾಟಕ್ಕೆ ಇಳಿಯುತ್ತೇವೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಎಚ್ಚರಿಸಿದರು.
ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ, ಕೆಪಿಸಿಸಿ ಕಚೇರಿ. https://t.co/DqUbRYGmZb
— Karnataka Congress (@INCKarnataka) March 21, 2023