ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪಕ್ಷ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದೆ.
6 ಲಕ್ಷ ಸಲಹೆ ಬಂದಿವೆ
ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಸಚಿವ ಸುಧಾಕರ್ ಮಾತನಾಡಿ, ಪ್ರಣಾಳಿಕೆ ರಚನೆ ವೇಳೆ 6 ಲಕ್ಷ ಸಲಹೆಗಳು ಬಂದಿವೆ. ಪರಿಣಿತರ ಜೊತೆ ಚರ್ಚಿಸಿ 900 ಸಲಹೆ ಪಡೆಯಲಾಗಿದೆ. ರೈತರಿಗೆ, ಕೂಲಿ ಕಾರ್ಮಿಕರಿಗೆ, ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆ ತಯಾರಿಕೆ ಮಾಡಲಾಗಿದೆ. ಸುಳ್ಳು ಭರವಸೆಗಳನ್ನು ಕೊಡದೇ ಈ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ಧ್ವಜ ಮುದ್ರಿಸಿ ಅಶಾಂತಿಗೆ ಸಂಚು ರೂಪಿಸಲಾಗುತ್ತಿದೆ ಎಂದು ಸ್ವತಂತ್ರ ಅಭ್ಯರ್ಥಿ ವಿರುದ್ಧ ದೂರು
3 ಗ್ಯಾಸ್ ಸಿಲಿಂಡರ್ ಫ್ರೀ
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹಲವು ಭರವಸೆ ಯೋಜನೆಗಳನ್ನು ನೀಡಿದೆ. ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮತದಾರರಿಗೆ ಭರವಸೆ ನೀಡಿದೆ.
ಅರ್ಧ ಲೀಟರ್ ಹಾಲು ಉಚಿತ
‘ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆ.ಜಿ ಶ್ರೀ ಅನ್ನ-ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ ಎಂದು ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಇದನ್ನೂ ಓದಿ: ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು