ಕಲ್ಕತ್ತಾ: ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ 1.15ಲಕ್ಷ ಕೋಟಿ ರೂಪಾಯಿ ಹಣ ಬಾಕಿ ಉಳಿಸಿಕೊಂಡಿದ್ದು, ಈ ಕೂಡಲೇ ಹಣವನ್ನು ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿ ಪ್ರಧಾನಿ ಮೋದಿ ಅವರನ್ನು ಕೆಲ ಸಚಿವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ. ಈ ಸಂಬಂಧ ಪ್ರಧಾನಿ ಅವರ ಭೇಟಿಗೆ ಸಮಯ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ನಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳಕ್ಕೆ ಬರಬೇಕಾಗಿರುವ 1.15 ಲಕ್ಷ ಕೋಟಿ ರೂಪಾಯಿ ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದ್ದು, ಈ ಕೂಡಲೇ ಬಡವರ ಪಾಲಿನ ಹಣವನ್ನು ಬಿಡುಗಡೆ ಮಾಡಿ ಇಲ್ಲವಾದಲ್ಲಿ ಕುರ್ಚಿ ಬಿಟ್ಟು ತೆರಳಿ ಎಂದಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಬಂಧಿಸಿ ಭಾರತವನ್ನು ಇಸ್ಲಾಮಿಕ್ ರಾಷ್ಟವನ್ನಾಗಿ ಮಾಡುತ್ತೇವೆ ಎಂದ ಪಾಕ್ ಸೇನೆಯ ಅಧಿಕಾರಿ; ವಿಡಿಯೋ ವೈರಲ್
ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಾನು ನಮ್ಮ ಪಕ್ಷದ ಕೆಲವು ಸಂಸದರು ಹಾಗೂ ಸಚಿವರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತೇನೆ. ಈ ಸಂಬಂಧ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಲಾಗಿದ್ದು, ಡಿಸೆಂಬರ್ 18-20ರ ಅವಧಿಯಲ್ಲಿ ಅವರನ್ನು ಭೇಟಿಯಾಗಿ ಗಮನ ಸೆಳೆಯುವ ಕೆಲಸ ಮಾಡುತ್ತೇವೆ.
ಒಂದು ವೇಳೆ ನೀವು ಹಣ ಬಿಡುಗಡೆ ಮಾಡದಿದ್ದಲ್ಲಿ ಬಾಕಿ ಹಣ ಕೊಡಿ, ಇಲ್ಲ ಕುರ್ಚಿ ಬಿಟ್ಟು ತೆರಳಿ ಎಂಬ ಘೋಷವಾಕ್ಯಗಳನ್ನು ಕೂಗಬೇಕಾಗುತ್ತದೆ. ಬಿಜೆಪಿಯವರ ಹಾಗೆ ನಾವು ಜನತೆಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಾಕಿ ಹಣ ಬಿಡುಗಡೆ ಮಾಡಿದ್ದರೆ ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಸಹಾಯವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.