ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಬೈಂದೂರು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶುಕ್ರವಾರ ಬೆಳಗ್ಗೆ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಬೈಂದೂರಿನಿಂದಲೇ ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಮಾಡಲಾಯಿತು.
ಬಿ.ವೈ.ರಾಘವೇಂದ್ರ ಈ ಬಾರಿ ಗರಿಷ್ಠ ಅಂತರದಲ್ಲಿ ಜಯ ಸಾಧಿಸುವ ನಿಟ್ಟಿನಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಬೂತ್ ಕಡೆಗೆ ಸಮೃದ್ಧ ನಡಿಗೆ ಆರಂಭಿಸಿ, ಎಲ್ಲ ಬೂತ್ಗಳಲ್ಲೂ ಸಂಚರಿಸಿ ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಾಹ ತುಂಬುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಶುಕ್ರವಾರ ಮಾಡುವ ಸಂಕಲ್ಪ ಶೀಘ್ರ ಈಡೇರುತ್ತದೆ ಎಂಬ ವಾಡಿಕೆಯೂ ಇದೆ ಎಂಬ ನೆಲೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ ಪಿ.ಬೈಂದೂರು, ಅನುರ್ ಮೆಂಡನ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ, ಪ್ರಮುಖರಾದ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಯಾನಂದ ಹೋಬಳಿದಾರ್ ಯುವಮೋರ್ಚಾ ಪದಾಧಿಕಾರಿಗಳು ಇದ್ದರು.
ವಿರೋಧ ಪಕ್ಷಕ್ಕೆ ಅಪಪ್ರಚಾರವೇ ಕೊನೆಯ ಅಸ್ತ್ರವಾಗಿದೆ. ಚುನಾವಣೆ ಫಲಿತಾಂಶದ ಮೂಲಕವೇ ಎಲ್ಲದಕ್ಕೂ ಉತ್ತರ ನೀಡಲಿದ್ದೇವೆ. ಕಾಂಗ್ರೆಸ್ನ ಅನೇಕರು ಬಿಜೆಪಿಗೆ ಸೇರುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಮುನ್ಸೂಚನೆಯಾಗಿದೆ. ಕ್ಷೇತ್ರಾದ್ಯಂತ ಬಿಜೆಪಿ ಅಲೆ ಎದ್ದಿದೆ. ಕಾರ್ಯರ್ತರು ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ನೆಲ್ಯಾಡಿ ದೀಪಕ್ಕುಮಾರ್ ಶೆಟ್ಟಿ, ಅಧ್ಯಕ್ಷ, ಬಿಜೆಪಿ ಬೈಂದೂರು ಮಂಡಲ