More

    ಬಿಜೆಪಿ ಟಿಕೆಟ್ ; ನಮ್ಮ ಅಭಿಪ್ರಾಯ ಕೇಳಬಹುದು: ದೇವೇಗೌಡ

    ಬೆಂಗಳೂರು: ಬಿಜೆಪಿ ಟಿಕೆಟ್ ವಿಚಾರವಾಗಿ ಕೆಲವು ಕ್ಷೇತ್ರಗಳ ಬಗ್ಗೆ ನಮ್ಮ ಅಭಿಪ್ರಾಯ ಕೇಳಬಹುದು. ಆಗ ಅಭಿಪ್ರಾಯವನ್ನು ಹೇಳುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

    ಜೆ.ಪಿ.ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

    ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.
    ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲ ಅಂತಿಮ ಆಗುತ್ತದೆ ಎಂದು ತಿಳಿಸಿದರು.

    ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್‌ಗೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕೆ? ಬೇಡವೆ? ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
    ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ಸಂಘಟನೆ ಚೆನ್ನಾಗಿದೆ. ಆದಷ್ಟು ಬೇಗ ಮಂಡ್ಯದಲ್ಲಿ ಸಮಾವೇಶ ನಡೆಸಲಾಗುವುದು. ನನಗೆ ವಯಸ್ಸಾಗಿದ್ದರೂ ನಾನೇನು ಸುಮ್ಮನೆ ಕೂರಲ್ಲ ಎಂದರು.

    ಬೆಂಗಳೂರು ಸ್ಪೋಟ ಪ್ರಕರಣ

    ಬೆಂಗಳೂರಿನಲ್ಲಿ ಸ್ಪೋಟ ಸಂಭವಿಸಿದ ಪ್ರಕರಣವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಅವರಿಬ್ಬರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸರ್ಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಅನಿಸುತ್ತಿದೆ ಎಂದರು.

    ಮಹಿಳಾ ಅಧ್ಯಕ್ಷರ ಪದಗ್ರಹಣ

    ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ನಿಕಟಪೂರ್ವ ಅಧ್ಯಕ್ಷೆ ಲೀಲಾದೇವಿ ಆರ್.ಪ್ರಸಾದ್ ಅವರಿಂದ ಪಕ್ಷದ ಭಾವುಟ ಸ್ವೀಕರಿಸುವ ಮೂಲಕ ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.

    ಕೋಲಾರದಲ್ಲಿ ಮಹಿಳಾ ಸಮಾವೇಶ

    ಮಹಿಳಾ ಘಟಕದ ನೂತನ ಅಧ್ಯಕ್ಷರು ಕೋಲಾರ ಜಿಲ್ಲೆಯವರು. ಹೀಗಾಗಿ ಅವರ ನೇತೃತ್ವದಲ್ಲಿ ಕೋಲಾರದಲ್ಲಿ ಜೆಡಿಎಸ್ ಮಹಿಳಾ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.

    ಕೋಲಾರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರು ಬರುತ್ತಾರೆ. ಲೋಕಸಭೆ ಚುನಾವಣೆ ಪ್ರಚಾರ ಕೋಲಾರದಿಂದಲೇ ಆರಂಭ ಆಗಲಿದೆ. ಪಕ್ಷದ ಶಕ್ತಿ ಏನಿದೆ ಎಂದು ಸಾಬೀತುಪಡಿಸಬೇಕು. ಬಿಜೆಪಿ ಹಾಗೂ ಜೆಡಿಎಸ್ ಸಂಬಂಧ ಹೇಗಿದೆ ಅಂತ ಸಂದೇಶ ಕೊಡಬೇಕಿದೆ ಎಂದು ದೇವೇಗೌಡ ಹೇಳಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ನಾಯಕಿ ಸುನೀತಾ ಚೌಹಾಣ್, ರಶ್ಮಿ ರಾಮೇಗೌಡ ಹಾಗೂ ಲೀಲಾದೇವಿ ಆರ್.ಪ್ರಸಾದ್ ಮಾತನಾಡಿದರು.
    ಜೆಡಿಎಸ್ ನಾಯಕಿಯರಾದ ಮಹೇಶ್ವರಿ ವಾಲಿ, ರೂತ್ ಮನೋರಮಾ, ಮಾಲೂರಿನ ಹಿರಿಯ ನಾಯಕ ರಾಮೇಗೌಡ ಸೇರಿದಂತೆ ಪಕ್ಷದ ಅನೇಕ ಹಿರಿಯ, ಕಿರಿಯ ನಾಯಕಿಯರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts