ಉಡುಪಿ: ಬಿಜೆಪಿ ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿತ್ತು ಎಂದು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಆ ಕುರಿತು ಸೂಕ್ತ ದಾಖಲೆ ಅವರಲ್ಲಿ ಇದ್ದರೆ ಜನತೆಯ ಮುಂದಿಡಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ್ ಕುಂದಾಪುರ ಸವಾಲು ಹಾಕಿದ್ದಾರೆ.
ಉಡುಪಿ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಹೆಗ್ಡೆ ಅಪಪ್ರಚಾರ
‘ವಿದೇಶದ ಸ್ವಿಸ್ ಬ್ಯಾಂಕ್ನಲ್ಲಿರುವ ಕಾಂಗ್ರೆಸ್ಸಿಗರ ಕಪ್ಪು ಹಣ ಭಾರತಕ್ಕೆ ತಂದರೆ ಪ್ರತಿ ಭಾರತೀಯನ ಖಾತೆಗೆ 15 ಲಕ್ಷ ರೂ. ಹಂಚುವಷ್ಟು ಹಣವಿರಬಹುದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು. ಆದರೆ, ಆ ಹೇಳಿಕೆಯನ್ನು ತಿರುಚಿ ಹೆಗ್ಡೆ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ಸಂಸತ್ನಲ್ಲಿ ಅಧಿಕೃತ ವಿರೋಧ ಪಕ್ಷದ ಮಾನ್ಯತೆಯೂ ಇಲ್ಲದೆ ದೇಶದೆಲ್ಲೆಡೆ ಜನತೆಯಿಂದ ತಿರಸತಗೊಂಡಿರುವ ಕಾಂಗ್ರೆಸ್ ಇದೀಗ ಸುಳ್ಳು ಸುದ್ದಿ ಉತ್ಪಾದಿಸುವ ಕಾರ್ಖಾನೆಯಂತಾಗಿದೆ ಎಂದರು.
ಪಕ್ಷೇತರರಂತೆ ಮತ ಯಾಚನೆ
ಜಯಪ್ರಕಾಶ್ ಹೆಗ್ಡೆ ಗೆಲ್ಲುವ ಮಾತಿರಲಿ, ಅಭ್ಯರ್ಥಿ ಆಯ್ಕೆಯಲ್ಲೇ ಕಾಂಗ್ರೆಸ್ ಎಡವಿದೆ. ಸ್ವಯಂ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಕೈ ನಾಯಕರ ವಿರೋಧದ ನಡುವೆಯೇ ಅಭ್ಯರ್ಥಿಯಾದ ದುಸ್ಥಿತಿ ಎದುರಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಹಿತ ಯಾವುದೇ ಕಾಂಗ್ರೆಸ್ ಮುಖಂಡರ ಹೆಸರು ಉಲ್ಲೇಖಿಸದೆ ಪಕ್ಷೇತರ ಅಭ್ಯರ್ಥಿಯಂತೆ ಅವರು ಮತ ಯಾಚಿಸುತ್ತಿರುವುದು ಶೋಚನೀಯ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣಕುಮಾರ್ ಬೈಲೂರು, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರ.ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ನಳಿನಿ ಪ್ರದಿಪ್ ರಾವ್, ದಿಲೇಶ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಇತರರಿದ್ದರು.
ವೋಟಿಗಾಗಿ ಆಸ್ಕರ್ ಪುತ್ಥಳಿಗೆ ಮಾಲಾರ್ಪಣೆ
ಸ್ವಾರ್ಥ ಸಾಧನೆ, ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುತ್ತಿರುವ ಜಯಪ್ರಕಾಶ್ ಹೆಗ್ಡೆ, ತನ್ನ ಬೆಂಬಲಿಗ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡಾಗ ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಬಗ್ಗೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಹೆಗ್ಡೆ, ಇದೀಗ ವೋಟಿಗಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿರುವುದು ವಿಪರ್ಯಾಸ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಅವರು ಚುನಾವಣೆ ಪ್ರಕ್ರಿಯೆಗಾಗಿ ಜಿಲ್ಲೆಯಲ್ಲಿ ಈವರೆಗೆ ಒಮ್ಮೆಯೂ ಕಾಣಿಸಿಕೊಂಡಿಲ್ಲ. ಇದು ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಗೆಲುವಿನ ಭರವಸೆಯೇ ಇಲ್ಲ ಎನ್ನುವುದನ್ನು ಸೂಚ್ಯವಾಗಿ ಹೇಳಿದಂತಿದೆ ಎಂದು ಕಿಶೋರಕುಮಾರ್ ಟೀಕಿಸಿದರು. ಸರಳ ಸಜ್ಜನ ರಾಜಕಾರಣಿಯಾದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲ್ಲಿಸುವ ಮೂಲಕ ಮೋದಿ ಅವರಿಗೆ ಶಕ್ತಿ ತುಂಬಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದರು.