ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದೇ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು, ಬಡವರು ಹಾಗೂ ಯುವಕರ ಏಳಿಗೆಯ ಜತೆಗೆ 14 ಭರವಸೆಗಳನ್ನು ನೀಡಲಾಗಿದ್ದು, ಪ್ರಧಾನಿ ಮೋದಿ ಅವರು ನೀಡಿರುವ ಭರವಸೆ 24 ಕ್ಯಾರೆಟ್ ಗೋಲ್ಡ್ನಂತೆ ಪರಿಶುದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಬಿಜೆಪಿ ತನ್ನ ಬದ್ಧತೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಣಾಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಗಳು 24 ಕ್ಯಾರೆಟ್ ಗೋಲ್ಡ್ನಂತೆ ಪರಿಶುದ್ಧವಾಗಿದೆ. ಬಿಜೆಪಿ ಬಿಡುಗಡೆ ಮಾಡಿರುವ ಸಂಕಲ್ಪ ಪತ್ರವನ್ನು ವಿಶ್ವ ರಾಜಕಾರಣದಲ್ಲಿ ಸುವರ್ಣಾಲಂಕಾರವಾಗಿ ನೋಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಹಿಳಾ ಮೀಸಲಾತಿ, ಆರ್ಟಿಕಲ್ 370 ರದ್ದತಿ, ರಾಮಮಂದಿರ ನಿರ್ಮಾಣ ಸೇರಿದಂತೆ ಕೇಂದ್ರ ಬಿಜೆಪಿ ಸರ್ಕಾರವು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈ ಹಿಂದೆ ನಾವು ಚುನಾವಣೆ ಸಮಯದಲ್ಲಿ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆ ತಯಾರಿ ವೇಳೆ ನಾವು 15 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.