ಕೊಪ್ಪಳ: ಜಿಲ್ಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ತಗ್ಗಿದೆ. ಹೀಗಾಗಿ ಇನ್ನು ಮುಂದೆ ಸೋಂಕಿತರನ್ನು ಕಡ್ಡಾಯವಾಗಿ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದ್ದರಿಂದ ಕರೊನಾ ಶೇ.0.5ಕ್ಕೆ ಇಳಿದಿದೆ. ಕೋವಿಡ್ ಕೇರ್ ಸೆಂಟರ್ನಲ್ಲಿ ಹಾಸಿಗೆಗಳು ಖಾಲಿಯಾಗಿದ್ದು, ಹೋಂ ಐಸೋಲೇಷನ್ಗೆ ಅವಕಾಶ ನೀಡಬಾರದು. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಶಸಚಿಕಿತ್ಸೆಗಾಗಿ ಬೇರೆ ಜಿಲ್ಲೆಗೆ ಕಳುಹಿಸದೆ ಕಿಮ್ಸ್ನಲ್ಲಿಯೇ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದು ತಿಳಿಸಿದರು.
ಜೂ.21ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲು ಸಿದ್ಧತೆ ಕೈಗೊಳ್ಳಬೇಕು. ಎರಡನೇ ಡೋಸ್ಗೆ ಅರ್ಹರಿರುವವರಿಗೆ ಶೀಘ್ರ ಲಸಿಕೆ ನೀಡಬೇಕು. ವೈದ್ಯರ ಕೊರತೆ ಇದ್ದಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಮಾತನಾಡಿ, ಬ್ಲ್ಯಾಕ್ ಫಂಗಸ್ಗೆ ಸ್ಥಳೀಯವಾಗಿಯೇ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು. ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ತಾಲೂಕುವಾರು ಕೋವಿಡ್ ಮಾಹಿತಿ ನೀಡುವಂತೆ ಆಗ್ರಹಿಸಿದರು. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಬೇಕೆಂದರು.
ಜಿಪಂ ಸಿಇಒ ರಘುನಂದನಮೂರ್ತಿ, ಎಸ್ಪಿ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್, ಸಹಾಯಕ ಆಯುಕ್ತ ನಾರಾಯಣರಡ್ಡಿ, ಡಿಎಚ್ಒ ಟಿ.ಲಿಂಗರಾಜ, ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ ಮತ್ತು ಇತರರಿದ್ದರು.